ಮಂಗಳೂರಿನಲ್ಲಿ ವಕೀಲನ ಮೇಲೆ ದೌರ್ಜನ್ಯ ಆರೋಪ: ಪೊಲೀಸ್ ಅಧಿಕಾರಿ ಅಮಾನತು
ಮಂಗಳೂರು, ಡಿಸೆಂಬರ್, 12: ವಕೀಲ ಕುಲದೀಪ್ ಮೇಲೆ ದೌರ್ಜನ್ಯ ಎಸಗಿರುವ ಪುಂಜಾಲಕಟ್ಟೆ ಪೊಲೀಸ್ ಅಧಿಕಾರಿ ಸುತೇಶ್ರನ್ನು ಐಜಿಪಿ ಪ್ರವೀಣ್ ಸೂದ್ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.
ಯುವ ವಕೀಲನ ಮೇಲಿನ ದೌರ್ಜನ್ಯವನ್ನು ಖಂಡಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರ ಬಳಿ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿಯವರು ಮಂಗಳೂರಿಗೆ ಭೇಟಿ ನೀಡಿದ ವೇಳೆ ವಕೀಲರ ಸಂಘ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪರಿಗಣಿಸಿದ ಸಿಎಂ ಬಸವರಾಜ ಬೊಮ್ಮಾಯಿ ಐಜಿಪಿಯವರಿಗೆ ತಕ್ಷಣ ಪೊಲೀಸ್ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಐಜಿಪಿ ಪ್ರವೀಣ್ ಸೂದ್ ಅವರು ಸುತೇಶ್ರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶಿಸಿದ್ದಾರೆ.
ಪೊಲೀಸ್ ಅಧಿಕಾರಿ ಸುತೇಶ್ ಅಮಾನತು
ಯುವ ನ್ಯಾಯವಾದಿ ಕುಲದೀಪ್ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪುಂಜಾಲಕಟ್ಟೆ ಠಾಣಾ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ವಕೀಲರು ಪ್ರತಿಭಟನೆ ನಡೆಸಿದ್ದರು. ಆದರೆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡದೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ವಕೀಲರ ಸಂಘ ಎಸ್ಪಿ ಕಚೇರಿಯವರೆಗೆ ಪ್ರತಿಭಟನೆ ನಡೆಸಬೇಕೆಂದು ಉದ್ದೇಶಿಸಿತ್ತು. ಆದರೆ ಇದೀಗ ಐಜಿಪಿಯವರು ಅಮಾನತು ಮಾಡಿ ಕ್ರಮ ವಹಿಸಿರುವುದರಿಂದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕಗಿರಿ
ಮಂಗಳೂರಿನಲ್ಲಿ ಮತ್ತೆ ಹಿಂದೂ - ಮುಸ್ಲಿಂ ಜೋಡಿಗಳ ಮೇಲೆ ಬಜರಂಗದಳ ಕಾರ್ಯಕರ್ತರಿಂದ ದಾಳಿ ನಡೆದಿದೆ. ಮಂಗಳೂರು ನಗರದ ಕೊಟ್ಟಾರದಲ್ಲಿ ತಡರಾತ್ರಿ ವೇಳೆ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಗಳ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ಸುತ್ತಾಡುತ್ತಿದ್ದಾರೆ ಎಂಬ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಅವರನ್ನು ತಡೆದು ನಿಲ್ಲಿಸಿದ್ದರು. ಈ ವೇಳೆ ಜೋಡಿಗಳನ್ನು ಪ್ರಶ್ನಿಸಿದಾಗ ಅವರು ತಾವು ಹೋಟೆಲ್ಗೆ ಊಟಕ್ಕೆ ಬಂದಿರುವುದಾಗಿ ಹೇಳಿದ್ದಾರೆ. ಆಗ ಮಧ್ಯರಾತ್ರಿ ಯಾವ ಹೊಟೇಲ್ ಇದೆ ಎಂದು ಕೇಳುತ್ತಾ ಹಲ್ಲೆಗೆ ಯತ್ನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉರ್ವ ಠಾಣಾ ಪೊಲೀಸರು ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಯಾಗಿದೆ.












Click it and Unblock the Notifications