ನವೆಂಬರ್ 25ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ
ಮಂಗಳೂರು, ನವೆಂಬರ್. 23: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ವಿಎಚ್ ಪಿ ಹಾಗೂ ಬಜರಂಗದಳ ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಜನಾಗ್ರಹ ಸಭೆಯ ಹಿನ್ನೆಲೆಯಲ್ಲಿ ನವೆಂಬರ್ 25 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವ ಈ ಬೃಹತ್ ಜನಾಗ್ರಹ ಸಭೆಗೆ 10 ಸಾವಿರಕ್ಕೂ ಮಿಕ್ಕಿ ಜನರು ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ , ಬಜರಂಗದಳ ಸೇರಿದಂತೆ ಇನ್ನಿತರ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಉಡುಪಿ ಬಂಟ್ವಾಳ, ಕಾಸರಗೋಡು, ಬೆಳ್ತಂಗಡಿ, ಸುಳ್ಯ , ಪುತ್ತೂರು, ಮೂಡಬಿದರೆಯಿಂದ ಕಾರ್ಯಕರ್ತರು ಈ ಸಭೆಗೆ ಬರಲಿದ್ದು, ಮಂಗಳೂರು ಕೋಮು ಸೂಕ್ಷ್ಮ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದರೂ ಅದು ಕೋಮು ರೂಪ ಪಡೆದುಕೊಳ್ಳುತ್ತದೆ.

ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ನವೆಂಬರ್ 25 ಮುಂಜಾನೆ 6 ರಿಂದ ತಡರಾತ್ರಿ 12 ರವರೆಗೆ ಮಂಗಳೂರು ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿರುವುದಾಗಿ ಅವರು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ವಿಎಚ್ ಪಿ ನೇತೃತ್ವದಲ್ಲಿ ಬೃಹತ್ ಸಮಾವೇಶವು ನಗರದ ಕೇಂದ್ರ ಮೈದಾನದಲ್ಲಿ ನವೆಂಬರ್ 25ರಂದು ನಡೆಯಲಿದ್ದು, ಅಂದಾಜಿನ ಪ್ರಕಾರ ಸುಮಾರು 50 ಸಾವಿರ ಜನ ಸೇರುವ ನಿರೀಕ್ಷೆ ಇದೆ.












Click it and Unblock the Notifications