ಕರಾವಳಿಗೆ ಅಮಿತ್ ಶಾ ಭೇಟಿ: ಪುತ್ತೂರಿನಲ್ಲಿ ಮದ್ಯ ಮಾರಾಟ ಬಂದ್, ಇಲ್ಲಿದೆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಯಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ವಲಯ ವ್ಯಾಪ್ತಿಯಲ್ಲ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ಫೆಬ್ರವರಿ 11: ಬಿಜೆಪಿ ಪಕ್ಷದ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲೇ ಬಿಜೆಪಿ ಹೈಕಮಾಂಡ್ ನಾಯಕರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ.
ಇತ್ತೀಚಿಗಷ್ಟೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಲಬುರ್ಗಿಗೆ ಭೇಟಿ ನೀಡಿದ್ದರು, ಇದರ ಬೆನ್ನಲ್ಲೇ ಕೇಂದ್ರ ಸಚಿವ ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ಅಮಿತ್ ಶಾ ಅವರನ್ನು ಸ್ವಾಗತಿಸಿಕೊಳ್ಳಲು ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ.
ಪುತ್ತೂರಿಗೆ ಭೇಟಿ ನೀಡುತ್ತಿರುವ ಅಮಿತ್ ಶಾ ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ) ನ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಫೆಬ್ರವರಿ 11ರ ಶನಿವಾರ ಮಧ್ಯಾಹ್ನ 2.15 ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಮಧ್ಯಾಹ್ನ 2.45 ಕಣ್ಣೂರಿನಿಂದ ಬಿಎಸ್ಎಫ್ ಹೆಲಿಕಾಪ್ಟರ್ ಮೂಲಕ ಪುತ್ತೂರಿನ ಈಶ್ವರ ಮಂಗಲ ದೇವಾಲಯಕ್ಕೆ ಆಗಮಿಸಲಿದ್ದಾರೆ. ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಅಮಿತ್ ಶಾ 3.35 ಹೆಲಿಕಾಪ್ಟರ್ ಮೂಲಕ ಈಶ್ವರ ಮಂಗಲದಿಂದ ಪುತ್ತೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.40: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ 6:15 ರಿಂದ 8:00ರವರೆಗೆ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖ ನಾಯಕರೊಂದಿಗೆ ಆಂತರಿಕ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ರಾತ್ರಿ 8:15 ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮತ್ತೆ ದೆಹಲಿಗೆ ವಾಪಸ್ ಆಗಲಿದ್ದಾರೆ.
ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಸಿದ್ಧತೆಗಳು ಸಂಪೂರ್ಣಗೊಂಡಿದ್ದು, ಪುತ್ತೂರು ವಲಯ ವ್ಯಾಪ್ತಿಯಲ್ಲಿ ಶನಿವಾರ ಮದ್ಯದ ಅಂಗಡಿಗಳಿಗೆ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ, ಶನಿವಾರ ಮಧ್ಯಾಹ್ನ 12ರಿಂದ ರಾತ್ರಿ 8ರವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.












Click it and Unblock the Notifications