ದಕ್ಷಿಣ ಕನ್ನಡದಲ್ಲಿ ಬೆಳೆಯುತ್ತಲಿದೆ ಬಿಜೆಪಿ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ
ಮಂಗಳೂರು, ಜನವರಿ 23: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಸದ್ದಿಲ್ಲದೇ ಚಟುವಟಿಕೆ ತೀವ್ರಗೊಳಿಸಿದ್ದಾರೆ.
ಮುಂಬರುವ ಚುನಾವಣೆ ಜಿದ್ದಾಜಿದ್ದಿಯಲ್ಲಿ ಜಯಗೊಳಿಸುವ ಲೆಕ್ಕಾಚಾರದ ಕುರಿತು ಗಂಭೀರ ಚಿಂತನೆ ಆರಂಭಗೊಂಡಿದ್ದು, ತೆರೆಮರೆಯಲ್ಲಿ ಟಿಕೆಟ್ ಲಾಬಿ ಜೋರಾಗಿಯೇ ನಡೆಯುತ್ತಿದೆ.
ಈ ಮಧ್ಯೆ ಮುಂಬರುವ ಚುನಾವಣೆಯಲ್ಲಿ ಯಾರಿಗೆ ಟಿಕೆಟ್? ಯಾರೆಲ್ಲಾ ಲಾಬಿ ನಡೆಸುತ್ತಿದ್ದಾರೆ? ಎಂಬುದರ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ತಳಮಟ್ಟದಲ್ಲಿ ಸಂಘಟನೆ ಚಟುವಟಿಕೆ ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಎರಡು ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಲಿದೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಉತ್ಸಾಹ ಹೆಚ್ಚಿದೆ. ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ಭದ್ರಕೋಟೆಗೆ ಲಗ್ಗೆ ಇಡಲು ಕಾಂಗ್ರೆಸ್ ಮುಖಂಡರು ರಣೋತ್ಸಾಹದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಲು ಆಕಾಂಕ್ಷಿಗಳ ಪೈಪೋಟಿ ಆರಂಭವಾಗಿದೆ. ಮುಂದೆ ಓದಿ...

ಕಾಂಗ್ರೆಸ್ ನಿಂದ ರಮಾನಾಥ ರೈ
ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ, ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉದ್ಯಮಿ ರಾಜಶೇಖರ ಕೋಟ್ಯಾನ್ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ.

ಬಿ ಜನಾರ್ಧನ ಪೂಜಾರಿ ಇಂಗಿತ
ಈ ನಡುವೆ ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ಧನ ಪೂಜಾರಿ ಟಿಕೆಟ್ ಸಿಕ್ಕರೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಗಾಗಿ ದೆಹಲಿ ಮಟ್ಟದಲ್ಲಿ ಯತ್ನಿಸುವುದಾಗಿ ಹೇಳಿಕೆ ನೀಡಿ ಕಾಂಗ್ರೆಸ್ ನ ಟಿಕೆಟ್ ಆಕಾಂಕ್ಷಿಗಳ ನಿದ್ದೆಗೆಡಿಸಿದ್ದಾರೆ.

ಚುನಾವಣೆಗೆ ಭರದ ಸಿದ್ಧತೆ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪಾಳಯದಲ್ಲೂ ಚುನಾವಣೆಗೆ ಭರದ ಸಿದ್ಧತೆ ಆರಂಭಗೊಂಡಿದೆ. ಬಿಜೆಪಿಯಿಂದ ಹಾಲಿ ಸಂಸದ ನಳಿನ್ ಕುಮಾರ್ ಮತ್ತೆ ಸ್ಪರ್ಧಿಸಲು ಮುಂದಾಗಿದ್ದಾರೆ. ಒಂದು ಮಾಹಿತಿ ಪ್ರಕಾರ ನಳಿನ್ ಅವರಿಗೆ ಟಿಕೆಟ್ ದೊರೆಯಲಿದೆ. ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ತಪ್ಪುವ ಮೇಲ್ನೋಟಕ್ಕೆ ಯಾವುದೇ ಸಮಸ್ಯೆ ಗೋಚರಿಸುತ್ತಿಲ್ಲ.

ಬಿಜೆಪಿ ಆಕಾಂಕ್ಷಿಗಳ ಪಟ್ಟಿ
ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಹಾಗೂ ಕೇರಳ ರಾಜ್ಯ ಬಿಜೆಪಿ ಘಟಕದ ಸಹ ಪ್ರಭಾರಿಯಾಗಿದ್ದಾರೆ. ತಮ್ಮ ನೇತೃತ್ವದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ರಲ್ಲಿ ಸಾಧಿಸಿದ ಗೆಲುವು ಅವರ ಬೆಂಬಲಕ್ಕಿದೆ. ಆದರೆ ಈ ನಡುವೆ ಬಿಜೆಪಿ ಯುವ ನಾಯಕ ಕ್ಯಾ ಬೃಜೇಶ್ ಚೌಟ, ಡಾ ಸುಧೀರ್ ಹೆಗ್ಡೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.












Click it and Unblock the Notifications