ಮಂಗಳೂರನ್ನು ಮತ್ತೆ ಕಾಡುತ್ತಿದೆ ಮಲೇರಿಯಾ, ಡೆಂಗ್ಯೂ
ಮಂಗಳೂರು, ಜೂನ್ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019ರ ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 494 ಮಲೇರಿಯಾ ಪ್ರಕರಣ ಕಂಡುಬಂದಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 470, ಮಂಗಳೂರಿನಲ್ಲಿ 16, ಬಂಟ್ವಾಳ 4, ಪುತ್ತೂರು 2, ಬೆಳ್ತಂಗಡಿ 2 ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತೀಚೆಗೆ ಮಹಾಕಾಳಿಪಡ್ಪು ಮತ್ತು ಎಮ್ಮೆಕೆರೆ ಪ್ರದೇಶದ 300ಕ್ಕಿಂತ ಅಧಿಕ ಮನೆಗಳಿಗೆ ಭೇಟಿ ನೀಡಿದ್ದು, ಮಹಾಕಾಳಿಪಡ್ಪು ಸಮೀಪದ ಮೂರು ಪ್ರದೇಶಗಳನ್ನು ಸೇರಿ 30 ಜನರಿಗೆ ಜ್ವರ ಇರುವುದು ಗಮನಕ್ಕೆ ಬಂದಿತ್ತು. ಇದರ ಪೈಕಿ 18 ಜನರಿಗೆ ಡೆಂಗ್ಯು ಲಕ್ಷಣಗಳು ಕಂಡುಬಂದಿದ್ದು, 4 ಮಂದಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ.
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಂಬಂಧಿಸಿ ಜಿಲ್ಲಾ ಆರೋಗ್ಯ ಇಲಾಖೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿರುವ ಹೊರತಾಗಿಯೂ ಮಲೇರಿಯಾ, ಡೆಂಗ್ಯೂನಂತಹ ರೋಗಗಳ ವರದಿಯಲ್ಲಿ ಮಂಗಳೂರು ರಾಜ್ಯದಲ್ಲಿ ಮತ್ತೆ ಅಗ್ರಸ್ಥಾನದಲ್ಲಿದ್ದು, ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಸಿದೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಂಚಾರಿ ಮಲೇರಿಯಾ ಚಿಕಿತ್ಸಾ ಘಟಕದ ಮೂಲಕ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗುತ್ತಿದೆ. ಕುಟುಂಬ ಸದಸ್ಯರಿಗೆ ಜ್ವರ ಕಾಣಿಸಿಕೊಂಡರೆ ತಕ್ಷಣ ಆರೋಗ್ಯ ಕೇಂದ್ರ ಅಥವಾ ವೈದ್ಯರಲ್ಲಿ ಪರೀಕ್ಷಿಸುವಂತೆ ಸೂಚನೆ ನೀಡಲಾಗಿದೆ. ಕೂಡಲೇ ಮನೆ ಬಾಗಿಲಿಗೆ ಬಂದು ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಂದು ವೇಳೆ ಹೆಚ್ಚಿನ ಚಿಕಿತ್ಸೆ ಬೇಕಾದರೆ ಉಚಿತ ವೈದ್ಯಕೀಯ ಚಿಕಿತ್ಸೆ ಸಹಿತ ಔಷಧಿ ನೀಡಲಾಗುತ್ತಿದೆ. 60 ಮಂದಿ ಮನೆಮನೆಗೆ ಭೇಟಿ ನೀಡಿ ಮಲೇರಿಯಾ ಜಾಗೃತಿ, ರಕ್ತ ಮಾದರಿ ಸಂಗ್ರಹ, ಸಮೀಕ್ಷೆ ಕೈಗೊಳ್ಳುತ್ತಿದ್ದಾರೆ.
ಮಲೇರಿಯಾ, ಡೆಂಗ್ಯೂ ಜ್ವರ ತಡೆಗಟ್ಟಲು ಜನರು ಮುನ್ನೆಚ್ಚರಿಕೆ ವಹಿಸಬೇಕು. ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಜಾಗೃತಿ ವಹಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications