ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ
ಮಂಗಳೂರು, ಸೆಪ್ಟೆಂಬರ್. 26: ಕಾಲೇಜಿನಲ್ಲಿ ನೀಡಿದ ಅತಿಯಾದ ಶಿಕ್ಷೆಗೆ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿ ನೆವಿಲ್ ಫೆರ್ನಾಂಡೀಸ್ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ.
ಮೊದಲನೇ ವರ್ಷದ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗೋವಾ ಮೂಲದ ನೆವಿಲ್ ಫೆರ್ನಾಂಡೀಸ್ ಕಾಲೇಜಿನಲ್ಲಿ ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿತ್ತು. ನೆವಿಲ್ ಜತೆ ವಿದ್ಯಾರ್ಥಿನಿಯನ್ನೂ ಕಾಲೇಜು ಆಡಳಿತ ಮಂಡಳಿ ಸಸ್ಪೆಂಡ್ ಮಾಡಿತ್ತು.
ಇದರಿಂದ ಮನನೊಂದ ವಿದ್ಯಾರ್ಥಿ ಅವಮಾನ ತಾಳಲಾರದೇ ಉರ್ವಾದಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಶರಣಾಗುವ ಮೊದಲು ನೆವಿಲ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾನೆ ಎಂದು ಹೇಳಲಾಗಿದೆ.

ಡೆತ್ ನೋಟನ್ನು ಉರ್ವಾಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಪರಿಶೀಲನೆ ನಡೆಸಿದ್ದಾರೆ. ಆದರೆ ವಿದ್ಯಾರ್ಥಿಯ ಪೋಷಕರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಲ್ಲ. ಡೆತ್ ನೋಟ್ ಆಧಾರದ ಮೇಲೆ ಉರ್ವಾ ಠಾಣೆಯ ಪೊಲೀಸರೇ ಸುಮೊಟೊ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಬಹುದಾಗಿದೆ.
ಆದರೆ ಪೊಲೀಸರು ಈ ರೀತಿ ಮಾಡದಿರುವುದು ಹಲವಾರು ಸಂಶಯಗಳಿಗೆ ಕಾರಣವಾಗಿದೆ. ಪ್ರಕರಣ ದಾಖಲಿಸದಂತೆ ಪೊಲೀಸರ ಮೇಲೆ ಒತ್ತಾಯ ಹಾಕಲಾಗುತ್ತಿದೆ ಎಂದು ಹೇಳಲಾಗಿದೆ.












Click it and Unblock the Notifications