ಆಗಸ್ಟ್ 11ರ ವರೆಗೆ ಮಂಗಳೂರು- ಬೆಂಗಳೂರು ರೈಲು ಸಂಚಾರ ರದ್ದು
ಮಂಗಳೂರು, ಆಗಸ್ಟ್ 8: ಶಿರಾಡಿ ಘಾಟ್ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿತ್ತು. ಹಳಿ ಮೇಲೆ ಬಿದ್ದಿರುವ ಭಾರೀ ಪ್ರಮಾಣದ ಮಣ್ಣು ಹಾಗೂ ಬಂಡೆಗಳನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ.
ಈ ಹಿನ್ನೆಲೆಯಲ್ಲಿ ಆಗಸ್ಟ್ 11ರ ವರೆಗೆ ಮಂಗಳೂರು- ಬೆಂಗಳೂರು ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಆಗಸ್ಟ್ 6ರಂದು ಮಂಗಳವಾರ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯ 86ನೇ ಕಿ.ಮೀ. ಹಾಗೂ 83 ಕಿ.ಮೀ. ಇತರ ಎರಡು ಕಡೆ ಸೇರಿ 4 ಕಡೆ ಕುಸಿತವಾಗಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ಹಳಿಯ ಮೇಲೆ ಬಿದ್ದಿದೆ. ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದೆ.

ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ತೊಂದರೆ ಉಂಟಾಗುತ್ತಿದೆ.












Click it and Unblock the Notifications