ಮೂಡುಬಿದಿರೆಯ ಕಾವ್ಯಾ ಆತ್ಮಹತ್ಯೆ, ವಿಶೇಷ ತನಿಖೆಗೆ ಆದೇಶ
ಮಂಗಳೂರು, ಜುಲೈ 28 : ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಕಾವ್ಯಾ(15) ಆತ್ಮಹತ್ಯೆ ಪ್ರಕರಣದ ಬಗ್ಗೆ ವಿಶೇಷ ತನಿಖೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಆದೇಶಿಸಿದ್ದಾರೆ.
ಕಟೀಲು ಸಮೀಪದ ಎಕ್ಕಾರು ದೇವಗುಡ್ಡೆ ನಿವಾಸಿ ಲೋಕೇಶ್ ಎಂಬುವರ ಪುತ್ರಿ, ರಾಜ್ಯಮಟ್ಟದ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದ ಕಾವ್ಯಾ ಜುಲೈ 20ರಂದು ರಾತ್ರಿ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಕ್ರೀಡಾ ಪ್ರತಿಭಾನ್ವಿತೆಯಾಗಿದ್ದ ಕಾವ್ಯಾಳ ಸಾವಿನ ಬಗ್ಗೆ ಅವರ ತಂದೆ ಲೋಕೇಶ್ ಶಂಕೆ ವ್ಯಕ್ತಪಡಿಸಿದ್ದು, ಇದೊಂದು ವ್ಯವಸ್ಥೆ ಕೊಲೆ ಎಂದು ಆಪಾದಿಸಿದ್ದಾರೆ. ಈ ಬಗ್ಗೆ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಜು.24ರಂದು ದೂರು ನೀಡಿದ್ದರು.
ಇದೀಗ ಪ್ರಕರಣದ ವಿಶೇಷ ತನಿಖೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಆದೇಶಿಸಿದ್ದಾರೆ. ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ವಿದ್ಯಾರ್ಥಿನಿಯರ ತಾಯಂದಿರು ನ್ಯಾಯ ಮರೀಚಿಕೆಯಾಗಿ ಕಣ್ಣೀರಿಡುತ್ತಿದ್ದಾರೆ. ಸೌಜನ್ಯಾ, ಅಕ್ಷತಾ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಹಲವು ವರ್ಷಗಳಲ್ಲಿ ನಡೆದ 500ರಷ್ಟು ಅಸಹಜ ಸಾವುಗಳು ನ್ಯಾಯ ಸಿಗದೆ ಮರೀಚಿಕೆಯಾಗಿಯೇ ಉಳಿದಿದೆ.
ಇದೀಗ ಕಾವ್ಯಾಳ ಸಾವು ಕೂಡಾ ಈ ಸಾಲಿಗೆ ಸೇರುವುದರಲ್ಲಿ ಸಂಶಯವಿಲ್ಲ ಎಂದು ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.











Click it and Unblock the Notifications