ಕಾಂಗ್ರೆಸ್ ನಿಂದ 144 ಸೆಕ್ಷನ್ ದುರ್ಬಳಕೆ: ಬಿಜೆಪಿಯ ಸಂಜೀವ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್ ಬಿಜೆಪಿ ಮತ್ತು ಸಂಘಪರಿವಾರದ ದಮನಕ್ಕೆ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ನೇರ ಆರೋಪ.
ಮಂಗಳೂರು, ಜುಲೈ 10: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು, ಸೆಕ್ಷನ್ 144 ಅನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಆರೋಪಿಸಿದ್ದಾರೆ.
ದ.ಕ. ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಸೆಕ್ಷನ್ 144 ವಿಧಿಸಿರುವ ಜಿಲ್ಲಾ ಪೊಲೀಸ್ ಇಲಾಖೆಯು ಜು.7ರಂದು ಅಡ್ಯಾರ್ನಲ್ಲಿ ಮುಖ್ಯಮಂತ್ರಿ ಪಾಲ್ಗೊಂಡ ಕಾಂಗ್ರೆಸ್ ಸಮಾವೇಶಕ್ಕಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಸೆ. 114 ಜಾರಿಗೊಳಿಸಿಲ್ಲ. ಆ ಮೂಲಕ ಸರಕಾರ ಆಡಳಿತ ದುರುಪಯೋಗ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಪಕ್ಷದ ಜಿಲ್ಲಾ ಕಚೇರಿಯ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳರ ಮೃತದೇಹದ ಮೆರವಣಿಗೆ ಸಂದರ್ಭ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದ ಹಿಂದುತ್ವವಾದಿ ಸಂಘಟನೆಗಳ ಮುಖಂಡರಾದ ಸತ್ಯಜಿತ್ ಸುರತ್ಕಲ್, ಶರಣ್ ಪಂಪ್ವೆಲ್, ಪ್ರದೀಪ್ ಪಂಪ್ವೆಲ್, ಮುರಳಿಕೃಷ್ಣ ಹಸಂತಡ್ಕ, ಹರೀಶ್ ಪೂಂಜಾರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿದೆ. ಇದು ಖಂಡನೀಯ. ಇದನ್ನು ವಾಪಸ್ ಪಡೆಯದಿದ್ದರೆ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಸಂಜೀವ ಮಠಂದೂರು ಎಚ್ಚರಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾದುದನ್ನು ಮರೆಮಾಚಲು ರಾಜ್ಯ ಸರಕಾರ ಕಳೆದ 47 ದಿನಗಳಿಂದ ಬಂಟ್ವಾಳ ಸಹಿತ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಸೆ.144 ಜಾರಿಗೊಳಿಸುವ ಮೂಲಕ ಉದ್ವಿಘ್ನ ವಾತಾವರಣ ಸೃಷ್ಟಿಸುತ್ತಿದೆ. ಪರಿಸರದಲ್ಲಿ ಭಯ ಹುಟ್ಟಿಸುವ ಪ್ರಯತ್ನ ಮಾಡುತ್ತಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್ ಹಾಗೂ ಇತರ ಕಾಂಗ್ರೆಸ್ ಶಾಸಕರು, ಮುಖಂಡರು ಬಿಜೆಪಿ ಮತ್ತು ಸಂಘಪರಿವಾರದ ದಮನಕ್ಕೆ ಷಡ್ಯಂತ್ರ ಮಾಡುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಸಚಿವ ನಾಗರಾಜ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.












Click it and Unblock the Notifications