ದಕ್ಷಿಣ ಕನ್ನಡದಲ್ಲಿ ಮುಂದುವರೆದ ಮಳೆ ಆರ್ಭಟ: ಬಂಟ್ವಾಳ ತಾಲೂಕಿನಲ್ಲಿ ಮನೆ ಮೇಲೆ ಕುಸಿದ ಗುಡ್ಡ, ಇಬ್ಬರ ರಕ್ಷಣೆ
ದಕ್ಷಿಣ ಕನ್ನಡ, ಜುಲೈ 6: ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮನೆ ಮೇಲೆ ಏಕಾಏಕಿ ಗುಡ್ಡ ಕುಸಿದು ಬಿದ್ದಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ನಾಲ್ವರು ಸಿಲುಕಿದ್ದಾರೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಕರಾವಳಿ ಜಿಲ್ಲೆಗೆ 'ರೆಡ್ ಅಲರ್ಟ್': ಭಾರಿ ಮಳೆ ಮುನ್ಸೂಚನೆ
ಕಾರ್ಲೋ ಎನ್ನುವವರಿಗೆ ಸೇರಿದ ಮನೆ ಎಂದು ತಿಳಿದು ಬಂದಿದ್ದು, ಮನೆಯಲ್ಲಿ ತೋಟದ ಕೆಲಸಕ್ಕೆ ಬಂದಿದ್ದ ಉತ್ತರ ಕರ್ನಾಟಕ ಮೂಲಕ ನಾಲ್ವರು ವಾಸಿಸುತ್ತಿದ್ದರು. ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಳಿದಿಬ್ಬರ ಶೋಧ ಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್. ಐ.ಹರೀಶ್ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಮಳೆ ತೀವ್ರತೆ ಕೊಂಚ ಕಡಿಮೆಯಾಗಿದ್ದರೂ ಮಳೆ ನಿರಂತರವಾಗಿ ಸುರಿಯುತ್ತಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ 8 ಮನೆಗಳಿಗೆ ಭಾಗಶ ಹಾನಿಯಾಗಿದೆ. 4 ಮನೆಗಳು ಮಾತ್ರ ಸಂಪೂರ್ಣವಾಗಿ ಹಾನಿಗೊಳಗಾಗಿವೆ. 81 ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.
ಗುರುವಾರ ಭಾರಿ ಮಳೆ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ ಗುರುವಾರ ಮಳೆ ಮತ್ತಷ್ಟು ತೀವ್ರಗೊಳ್ಳುವ ಮುನ್ಸೂಚನೆ ನೀಡಿದ್ದು. ರೆಡ್ ಅಲರ್ಟ್ ಘೋಷಿಸಿದೆ. ಜುಲೈ 7 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮುಂಗಾರು ಮಳೆ ಅಬ್ಬರ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ
ಮಂಗಳೂರು ನಗರದ ಹೊರವಲಯದಲ್ಲಿರುವ ಮರೋಳಿಯಲ್ಲಿ ಮನೆಯ ಆವರಣ ಗೋಡೆಯ ಜತೆ ಮನೆಯ ಗೋಡೆ ಕೂಡ ಕುಸಿದು ಬಿದ್ದಿದೆ. ಕಿನ್ಯ ಗ್ರಾಮದ ಸಾಂತ್ಯ ಎಂಬಲ್ಲಿ ದೇವಕಿ ಎಂಬವರ ಮನೆಗೆ ಮಣ್ಣು ಬಿದ್ದು ಭಾಗಶಃ ಹಾನಿಯಾಗಿದೆ.
ಪಜೀರು ಗ್ರಾಮದ ಮುರಾಯಿಯಲ್ಲಿ ಮನೆ ಹತ್ತಿರ ಗುಡ್ಡ ಕುಸಿದು ಅಡಕೆ ತೋಟಕ್ಕೆ ಹಾನಿಯಾಗಿದೆ. ಸೋಮೇಶ್ವರ ಗ್ರಾಮದ ಮೂರುಕಟ್ಟೆಯಲ್ಲಿ ಬಾವಿಯೊಂದು ಕುಸಿದು ಬಿದ್ದಿದೆ. ಹಳೆಯಂಗಡಿ, ಏಳಿಂಜೆ, ಬೆಳ್ಳಾಯರು, ಕೊಯಿಕುಡೆ ಭಾಗದಲ್ಲಿ ಕೆಲವು ಮನೆಗಳಿಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ.
ಜಿಲ್ಲೆಯಲ್ಲಿನ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಸಮುದ್ರದಲ್ಲಿ ಬಾರಿ ಅಲೆಗಳು ಏಳುವ ಸಾಧ್ಯತೆ ಇದ್ದು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿ ಪಾತ್ರದ ಜನ ಕೂಡ ಎಚ್ಚರದಿಂದ ಇರುವಂತೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.