ವಿನಾಯಕ ಬಾಳಿಗ ಹತ್ಯೆ, ನರೇಶ್ ಶೆಣೈ ಜಾಮೀನು ಅರ್ಜಿ ವಜಾ
ಮಂಗಳೂರು, ಆಗಸ್ಟ್ 10 : ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ಆರೋಪಿ ನರೇಶ್ ಶೆಣೈಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ನರೇಶ್ ಶೆಣೈ ಅವರು ಸದ್ಯ, ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮಂಗಳೂರಿನ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಆಗಸ್ಟ್ 9ರಂದು ನರೇಶ್ ಶೆಣೈ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಜೂನ್ 27ರಂದು ಜಾಮೀನು ಅರ್ಜಿ ಸಲ್ಲಿಸಲಾಗಿತ್ತು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಆಗಸ್ಟ್ 9ಕ್ಕೆ ಮುಂದೂಡಿತ್ತು.[ಬಾಳಿಗ ಹತ್ಯೆ : 770 ಪುಟಗಳ ಚಾರ್ಜ್ ಶೀಟ್]

ಕೊಲೆ ಪ್ರಕರಣದಲ್ಲಿ ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ನರೇಶ್ ಶೆಣೈ ಅವರು ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಎಲ್ಲೂ ಜಾಮೀನು ಸಿಕ್ಕಿರಲಿಲ್ಲ. ಜೂನ್ 26ರಂದು ಉಡುಪಿಯಲ್ಲಿ ನರೇಶ್ ಶೆಣೈ ಬಂಧಿಸಿದ್ದರು.[ನರೇಶ್ ಶೆಣೈ ಮೂರು ದಿನಗಳ ಕಾಲ ಪೊಲೀಸರ ವಶಕ್ಕೆ]
ವಿನಾಯಕ ಬಾಳಿಗ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿ ಶೈಲೇಶ್ಗೆ ಜಿಲ್ಲಾ ನ್ಯಾಯಾಲಯದ ಜಾಮೀನು ನೀಡಿದೆ. ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಪ್ರಕರಣದ ತನಿಖಾಧಿಕಾರಿಗಳು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಶಿವ ಮತ್ತು ಶ್ರೀಕಾಂತ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು, ವಿಚಾರಣೆ ಬಾಕಿ ಇದೆ.
2016ರ ಮಾರ್ಚ್ 21ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಬಳಿ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಅವರ ಹತ್ಯೆ ನಡೆದಿತ್ತು. ಹತ್ಯೆಯ ಪ್ರಮುಖ ಆರೋಪಿ ನರೇಶ್ ಶೆಣೈ ಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದರು. ಜೂನ್ 26ರಂದು ಅವರನ್ನು ಬಂಧಿಸಲಾಗಿದ್ದು, ನ್ಯಾಯಾಂ ಬಂಧನದಲ್ಲಿದ್ದಾರೆ.












Click it and Unblock the Notifications