Vande Bharat Train; ಮಂಗಳೂರು-ಮಡಗಾಂವ್ ರೈಲು ವೇಳಾಪಟ್ಟಿ, ನಿಲ್ದಾಣ
ಮಂಗಳೂರು, ಡಿಸೆಂಬರ್ 27; ಕರಾವಳಿ ನಗರಿ ಮಂಗಳೂರಿಗೆ ವಂದೇ ಭಾರತ್ ರೈಲು ಬೇಕು ಎಂಬ ಬೇಡಿಕೆಗೆ ಮನ್ನಣೆ ಸಿಕ್ಕಿದೆ. ಮಂಗಳೂರು-ಮಡಗಾಂವ್ ನಡುವೆ ರೈಲು ಸಂಚಾರ ನಡೆಸಲಿದೆ, ಪ್ರಾಯೋಗಿಕ ಸಂಚಾರ ಸಹ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಮಂಗಳವಾರ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಟ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಗೋವಾದ ಮಡಗಾಂವ್ ತಲುಪಿದೆ. ಪ್ರಾಯೋಗಿಕ ಸಂಚಾರ ಪೂರ್ಣಗೊಂಡಿದೆ. ಈ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 30ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ರೈಲ್ವೆ ಇಲಾಖೆ ಅಧಿಕಾರಿಗಳು ಪ್ರಾಯೋಗಿಕ ಸಂಚಾರಕ್ಕೆ ಸಾಕ್ಷಿಯಾದರು. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಬೆಳಗ್ಗೆ 8.30ಕ್ಕೆ ಹೊರಟ ರೈಲು ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಡಗಾಂವ್ ತಲುಪಿತು.
ರೈಲು ವೇಳಾಪಟ್ಟಿ; ರೈಲ್ವೆ ಸಚಿವಾಲಯ ಈಗಾಗಲೇ ಮಂಗಳೂರು-ಮಡಗಾಂವ್ ನಡುವಿನ ವಂದೇ ಭಾರತ್ ರೈಲಿನ ವೇಳಾಪಟ್ಟಿಯನ್ನು ಸಿದ್ಧಪಡಿಸಿದೆ. ಮಂಗಳೂರಿನಿಂದ ಹೊರಡುವ ರೈಲು ಉಡುಪಿ ಮತ್ತು ಕಾರವಾರದ ಮೂಲಕ ಮಡಗಾಂವ್ ತಲುಪಲಿದೆ. ಮಂಗಳವಾರ ಹೊರತುಪಡಿಸಿ ವಾರದ ಉಳಿದ ದಿನ ರೈಲು ಸಂಚಾರ ನಡೆಸುತ್ತದೆ.
ಸದ್ಯದ ವೇಳಾಪಟ್ಟಿಯಂತೆ ಬೆಳಗ್ಗೆ 8.30ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಡುವ ವಂದೇ ಭಾರತ್ ರೈಲು, ಮಧ್ಯಾಹ್ನ 1.05ಕ್ಕೆ ಮಡಗಾಂವ್ ತಲುಪಲಿದೆ. ಮಡಗಾಂವ್ನಿಂದ ಸಂಜೆ 6.10ಕ್ಕೆ ಹೊರಟು, ರಾತ್ರಿ 10.45ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಆಗಮಿಸಲಿದೆ.
ಈ ರೈಲು ಉಡುಪಿಗೆ ಬೆಳಗ್ಗೆ 9.50/ ರಾತ್ರಿ 9.14 ಮತ್ತು ಕಾರವಾರಕ್ಕೆ ಮಧ್ಯಾಹ್ನ 12.10/ ಸಂಜೆ ಸಂಜೆ 6.57ಕ್ಕೆ ಆಗಮಿಸಲಿದೆ. ಇದೇ ವೇಳಾಪಟ್ಟಿ ಅನ್ವಯ ರೈಲು ಸದ್ಯ ಸಂಚಾರ ನಡೆಸಲಿದೆ. ಬಳಿಕ ಪ್ರಯಾಣಿಕರ ಪ್ರತಿಕ್ರಿಯೆ ನೋಡಿಕೊಂಡು ವೇಳಾಪಟ್ಟಿ ಬದಲಾವಣೆ ಮಾಡುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.
ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಬೇಕು ಎಂದು ವಿವಿಧ ಸಂಘಟನೆಗಳು ಬೇಡಿಕೆ ಇಟ್ಟಿದ್ದವು. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸಹ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾಗಿ ಮನವಿ ಮಾಡಿದ್ದರು. ಬೆಂಗಳೂರು ಮತ್ತು ಮಂಗಳೂರು ನಡುವೆ ಸಹ ವಂದೇ ಭಾರತ್ ರೈಲು ಸಂಚಾರ ನಡೆಸಬೇಕು ಎಂಬ ಬೇಡಿಕೆ ಇದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪಾಲಕ್ಕಾಡ್ ರೈಲ್ವೆ ವಿಭಾಗದ ವತಿಯಿಂದ ವಂದೇ ಭಾರತ್ ರೈಲಿನ ನಿರ್ವಹಣೆಗೆ ಬೇಕಾದ ಮೂಲಸೌಲಭ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕರ್ನಾಟಕದ ಕರಾವಳಿ ಮತ್ತು ಗೋವಾ ನಡುವೆ ಸಂಪರ್ಕ ಕಲ್ಪಿಸುವ ರೈಲು ಸೇವೆಗೆ ಹೇಗೆ ಪ್ರತಿಕ್ರಿಯೆ ವ್ಯಕ್ತವಾಗಲಿದೆ? ಕಾದು ನೋಡಬೇಕಿದೆ.
2022ರ ನವೆಂಬರ್ನಲ್ಲಿ ಕರ್ನಾಟಕದಲ್ಲಿ ಮೊದಲ ವಂದೇ ಭಾರತ್ ರೈಲು ಸಂಚಾರ ಆರಂಭವಾಯಿತು. ಮೈಸೂರು-ಬೆಂಗಳೂರು-ಚೆನ್ನೈ ನಡುವೆ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಬಳಿಕ 2023ರಲ್ಲಿ ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಯಿತು.
ಈಗ ಬೆಂಗಳೂರಿನ ಯಶವಂತಪುರ ಮತ್ತು ಕಾಚಿಗುಡ (ಹೈದರಾಬಾದ್) ನಡುವೆ ಸಹ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಬೆಂಗಳೂರು-ಕೊಯಮತ್ತೂರು ನಡುವೆ ಸಹ ವಂದೇ ಭಾರತ್ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ಇದರ ನಡುವೆಯೇ ಮಂಗಳೂರು-ಮಡಗಾಂವ್ ನಡುವಿನ ವಂದೇ ಭಾರತ್ ರೈಲು ಸಂಚಾರವನ್ನು ಆರಂಭಿಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 30ರಂದು ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಜೊತೆಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಲಾದ 4 ಮತ್ತು 5ನೇ ಪ್ಲಾಟ್ ಫಾರಂ ಅನ್ನು ಸಹ ಉದ್ಘಾಟನೆ ಮಾಡಲಿದ್ದಾರೆ.












Click it and Unblock the Notifications