ಮದ್ಯದಂಗಡಿ ವಿರುದ್ಧ ಸಿಡಿದೆದ್ದ ಪುತ್ತೂರಿನ ಕಡಬದ ಗ್ರಾಮಸ್ಥರು
ಮಂಗಳೂರು, ಸೆಪ್ಟೆಂಬರ್ 21: ಸರಕಾರಿ ಜಮೀನಿನಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ತಲೆ ಎತ್ತಿರುವ ಮದ್ಯದಂಗಡಿ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕಲ್ಲುಗುಡ್ಡೆಯಲ್ಲಿ ಗ್ರಾಮಸ್ಥರು ಸಿಡಿದೆದ್ದಿದ್ದಾರೆ.
ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಇಂದೂ ಪ್ರತಿಭಟನೆ ನಡೆಯುತ್ತಿದೆ.
ಮದ್ಯದಂಗಡಿಯನ್ನು ಕೂಡಲೇ ಬಂದ್ ಮಾಡಬೇಕೆಂದು ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳು ಮುಷ್ಕರ ನಡೆಸುತ್ತಿದ್ದರೂ ಅಧಿಕಾರಿಗಳು ಈ ಬಗ್ಗೆ ಗಮನವನ್ನೇ ಹರಿಸಿಲ್ಲ ಎನ್ನುವ ಆರೋಪವನ್ನೂ ಗ್ರಾಮಸ್ಥರು ಮಾಡುತ್ತಿದ್ದಾರೆ.

ಮಕ್ಕಳೊಂದಿಗೆ ಪ್ರತಿಭಟನೆ
ಬುಧವಾರ ಬೃಹತ್ ಸಂಖ್ಯೆಯಲ್ಲಿ ಸೇರಿದ ಗ್ರಾಮಸ್ಥರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೆ ಮಕ್ಕಳೊಂದಿಗೆ ಮದ್ಯದಂಗಡಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗುತ್ತಿದ್ದಂತೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಪ್ರತಿಭಟನಾಕಾರರನ್ನು ಮನವೊಲಿಸಲು ಯತ್ನಿಸಿದರೂ ಗ್ರಾಮಸ್ಥರು ಈ ಮನವಿಗೆ ಮಣಿಯಲಿಲ್ಲ.

ಅಧಿಕಾರಿಗೆ ದಿಗ್ಬಂಧನ
ತಮ್ಮ ಬೇಡಿಕೆಯಂತೆ ಮದ್ಯದಂಗಡಿಯನ್ನು ಸ್ಥಳಾಂತರಿಸಬೇಕು ಎನ್ನುವ ಒತ್ತಾಯಕ್ಕೆ ಮನ್ನಣೆ ನೀಡದ ಅಧಿಕಾರಿಗೆ ಗ್ರಾಮಸ್ಥರು ದಿಗ್ಬಂಧನ ಹಾಕಿದರು. ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರೀ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇಂದೂ ಪ್ರತಿಭಟನೆ
ಪುತ್ತೂರು ಸಹಾಯಕ ಆಯುಕ್ತರು ಸ್ಥಳಕ್ಕೆ ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದು ಇಂದೂ (ಗುರುವಾರ) ಮತ್ತೆ ಪ್ರತಿಭಟನೆ ಮುಂದುವರೆದಿದೆ.

ಇನ್ನೇನಾಗುತ್ತೋ ಗೊತ್ತಿಲ್ಲ
ಮದ್ಯದಂಗಡಿಯ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ .












Click it and Unblock the Notifications