ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ
ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಎನ್ ಶಶಿಕುಮಾರ್ ವರ್ಗಾವಣೆಗೊಂಡಿದ್ದಾರೆ. ಮಂಗಳೂರು ನೂತನ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್ ಜೈನ್ ನೇಮಕಗೊಂಡಿದ್ದಾರೆ.
ಮಂಗಳೂರು, ಫೆಬ್ರವರಿ 23: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.
ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಕುಲದೀಪ್ ಅವರು ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಹೊರಡಿಸಿರುವ ನೂತನ ವರ್ಗಾವಣೆ ಆದೇಶದಲ್ಲಿ ಶಶಿಕುಮಾರ್ ಸೇರಿದಂತೆ 7 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

2020ರ ಡಿಸೆಂಬರ್ನಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಶಶಿಕುಮಾರ್ ಅವರನ್ನು ನೂತನ ಆಯುಕ್ತರನ್ನಾಗಿ ನೇಮಿಸಿತ್ತು. ಕರ್ತವ್ಯ ವಹಿಸಿಕೊಂಡ ಬಳಿಕ ಎನ್.ಶಶಿಕುಮಾರ್ ಮಂಗಳೂರಿನಲ್ಲಿ ಸಕ್ರಿಯ ಅಧಿಕಾರಿಯಾಗಿದ್ದರು.
ಮಂಗಳೂರಿನಲ್ಲಿ ಜನಸಾಮಾನ್ಯರೊಂದಿಗೆ ಬೆರೆಯುತ್ತಿದ್ದ ಅವರು, ಅನೇಕ ಸಾಮಾಜಿಕ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದರು. ಎನ್.ಶಶಿಕುಮಾರ್ ಅವರು ಮಂಗಳೂರಿನ ಜನರ ಜೊತೆ ಆಪ್ತರಾಗಿದ್ದರು. ಆದರೆ ಇತ್ತೀಚಿಗೆ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು.

ಇತ್ತೀಚಿಗೆ ಮಂಗಳೂರು ನಗರದಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಬಹಿರಂಗವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಮಂಗಳೂರು ಪೊಲೀಸ್ ಇಲಾಖೆಯ ವಿರುದ್ಧ ಭ್ರಷ್ಟಾಚಾರ ಆರೋಪದ ಸುರಿಮಳೆಯನ್ನೇ ಸುರಿಸಿದ್ದರು ಈ ಘಟನೆ ಬೆನ್ನಲ್ಲೇ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.












Click it and Unblock the Notifications