ಕೆಪಿಎಸ್ಸಿ ಸದಸ್ಯ ರೊನಾಲ್ಡ್ ಫೆರ್ನಾಂಡಿಸ್ಗೆ ಪ್ರೆಸ್ಕ್ಲಬ್ನಿಂದ ಅಭಿನಂದನೆ
ಮಂಗಳೂರು, ಜುಲೈ 17: ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ನ ಅಧ್ಯಕ್ಷ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಅವರನ್ನು ಪ್ರೆಸ್ ಕ್ಲಬ್ನ ವತಿಯಿಂದ ಅಭಿನಂದಿಸಲಾಯಿತು.
ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ನ ವಾರ್ಷಿಕ ಮಹಾಸಭೆಯಲ್ಲಿ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ ಅವರು ಪ್ರೆಸ್ ಕ್ಲಬ್ನ ಪರವಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್ ಟಿ ಬಾಳೆಪುಣಿ, 'ಪತ್ರಕರ್ತರೊಬ್ಬರು ಕೆಪಿಎಸ್ಸಿ ಸದಸ್ಯರಾಗಿ ಮೊದಲ ಬಾರಿಗೆ ನೇಮಕಗೊಂಡಿದ್ದಾರೆ. ಇದು ಪತ್ರಕರ್ತರಿಗೆ ಅಭಿಮಾನದ ಸಂಗತಿ' ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಯುವ ಜನತೆಗೆ ಉದ್ಯೋಗಾವಕಾಶವನ್ನು ಒದಗಿಸುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸುವ ಅಪೂರ್ವ ಅವಕಾಶ ದೊರಕಿದೆ. ಅರ್ಹರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಮಾಜಿ ಅಧ್ಯಕ್ಷರಾದ ಪಿ.ಬಿ.ಹರೀಶ್ ರೈ ಹಾಗೂ ಬಿ.ರವೀಂದ್ರ ಶೆಟ್ಟಿ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಮಾಜಿ ಅಧ್ಯಕ್ಷ ಆರ್. ರಾಮಕೃಷ್ಣ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್, ಪತ್ರಿಕಾ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್. ಹಿರಿಯ ಪತ್ರಕರ್ತರಾದ ಮುಹಮ್ಮದ್ ಆರೀಫ್, ವೇಣು ವಿನೋದ್, ಆತ್ಮಭೂಷಣ್ ಭಟ್ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications