ಮಂಗಳೂರು ನಗರ ದಕ್ಷಿಣಕ್ಕೆ 65 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ: ಶಾಸಕ ಕಾಮತ್
ಮಂಗಳೂರು, ಸೆ 25: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 65 ಕೋಟಿ ಅನುದಾನವನ್ನು ಕ್ಷೇತ್ರದ ವಿವಿಧ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕರು, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯನ್ನು ಕರ್ನಾಟಕ ರಾಜ್ಯ ಸರಕಾರದಿಂದ 2018-19 ರಿಂದ 2023-24ನೇ ಸಾಲಿಗೆ ಅನುಷ್ಠಾನಗೊಳಿಸಲು ಮಂಗಳೂರು ಮಹಾನಗರ ಪಾಲಿಕೆಗೆ 125 ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಹೆಚ್ಚುವರಿ ಕಾಮಗಾರಿಗಳನ್ನು ಹೊರತುಪಡಿಸಿ 105 ಕೋಟಿ ರೂಪಾಯಿ ಅನುದಾನ ಲಭ್ಯವಿದೆ.
ಅದರಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 65 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಮುಂದೆ ನಡೆಯಲಿದೆ ಎಂದಿದ್ದಾರೆ. ಎಂ.ಜಿ.ಎನ್.ವಿ.ವೈ ಅಡಿ ಲಭ್ಯವಾಗುವ ಪರಿಶಿಷ್ಟ ಜಾತಿ ಉಪಯೋಗಗಳಿಗೆ 15.18 ಕೋಟಿ ರೂಪಾಯಿ, ಸಂಚಾರ ವ್ಯವಸ್ಥೆ ಸುಧಾರಣೆಗೆ 3.15 ಕೋಟಿಯ ಕಾಮಗಾರಿಗಳು ನಡೆಯಲಿದೆ.

ಅಲ್ಲದೇ, ಅಮೃತ್, ಜೆಎನ್ ನರ್ಮ್ ಮತ್ತು ಸ್ವಚ್ಛತೆಗಾಗಿ 6 ಕೋಟಿ,ಕುಡಿಯುವ ನೀರಿನ ಕಾಮಗಾರಿಗಳಿಗೆ 2.76 ಕೋಟಿ, ಚರಂಡಿ ಮತ್ತು ಒಳ ಚರಂಡಿ ವ್ಯವಸ್ಥೆ, ಜಂಕ್ಷನ್ಗಳಲ್ಲಿ ಗ್ರೇಡ್ ಸಪರೇಟರ್ ನಿರ್ಮಾಣ, ರಸ್ತೆ,ರಸ್ತೆಯ ಬದಿ ಚರಂಡಿ ನಿರ್ಮಾಣ, ಫುಟ್ ಪಾತ್ ಅಭಿವೃದ್ಧಿ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆಗಳ ಅಭಿವೃದ್ಧಿಗೆ, ಸೇತುವೆ ನಿರ್ಮಾಣ ಕಾಮಗಾರಿ, ಘನ ತ್ಯಾಜ್ಯ ನಿರ್ವಹಣೆ ಸೇರಿದಂತೆ ಸರ್ಕಲ್ ಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ 38.664 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಲಭ್ಯವಿದೆ ಎಂದು ಶಾಸಕರು ತಿಳಿಸಿದ್ದಾರೆ.
ಈಗಾಗಲೇ ಸಚಿವ ಸಂಪುಟದಲ್ಲಿ ಇದಕ್ಕೆ ಅನುಮೋದನೆ ದೊರೆತಿದ್ದು, ನಗರಾಭಿವೃದ್ಧಿ ಇಲಾಖೆಯು ಕಾಮಗಾರಿಯ ಮೂಲ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ. ಆ ಪ್ರಕಾರ ಮಹಾನಗರ ಪಾಲಿಕೆಯು ಮೂಲ ಪ್ರಸ್ತಾವನೆಯನ್ನು ಪಟ್ಟಿ ಮಾಡಿ ಸಲ್ಲಿಸಿಲಾಗುವುದು. ಹಾಗೂ ನಗರಾಭಿವೃದ್ಧಿ ಇಲಾಖೆಯ ಅನುಮೋದನೆ ದೊರೆತ ತಕ್ಷಣ ಈ ಎಲ್ಲಾ ಅನುದಾನಗಳನ್ನು ಸಮರ್ಪಕವಾಗಿ ಬಳಸಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಒಟ್ಟು ಮಂಗಳೂರಿನ ಅಭಿವೃದ್ಧಿಯ ದೃಷ್ಠಿಯಿಂದ ಈ ಕಾಮಗಾರಿಗಳು ಶೀಘ್ರವೇ ಅನುಷ್ಠಾನಕ್ಕೆ ತರುವಲ್ಲಿ ಪ್ರಯತ್ನಿಸಲಾಗುವುದು. ಹಾಗೂ, ಈ ಅನುದಾನವನ್ನು ಬಿಡುಗಡೆಗೊಳಿಸಿ ಮಂಗಳೂರಿನ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.












Click it and Unblock the Notifications