ಮಂಗಳೂರಿನಲ್ಲಿ ಮತ್ತೆ ಶುರುವಾದ ಹಿಜಾಬ್ ವಿವಾದ
ಮಂಗಳೂರು, ಮೇ 26: ದೇಶಾದ್ಯಂತ ಸಾಕಷ್ಟು ಸುದ್ದಿ ಮಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿದ್ದ ಹಿಜಾಬ್ ವಿವಾದ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗುವ ಮುನ್ನ ಹಿಜಾಬ್ ತೆಗೆಯಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. 40 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಿದ್ದರು ಎಂದು ಆರೋಪಿಸಲಾಗಿದೆ.
ಹಿಜಾಬ್ ಆಯ್ಕೆ ಅವರವರ ಹಕ್ಕು: ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್
ವಿದ್ಯಾರ್ಥಿಗಳು ತರಗತಿಯಿಂದ ಹೊರಬಂದು ಪ್ರತಿಭಟನೆ ನಡೆಸಿದರು. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ತೆಗೆಯುವವರೆಗೆ ಅಥವಾ ಹೊರಗೆ ಕಳುಹಿಸುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ. ಸಮಸ್ಯೆ ಬಗೆಹರಿಯುವವರೆಗೂ ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ಪ್ರತಿಭಟನಾನಿರತರು ಪಟ್ಟು ಹಿಡಿದಿದ್ದಾರೆ.
40 ರಿಂದ 50 ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ಆದೇಶವನ್ನು ಅನುಸರಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಾಲೇಜು ಅಭಿವೃದ್ಧಿ ಸಮಿತಿಯು (ಸಿಡಿಸಿ) ಕೂಡಲೇ ಸಭೆ ನಡೆಸಿ ಹಿಜಾಬ್ ಧರಿಸುವ ವಿದ್ಯಾರ್ಥಿಗಳಿಗೆ ಕ್ಯಾಂಪಸ್ನೊಳಗೆ ಬಿಡುವುದಿಲ್ಲ ಎಂದು ಆದೇಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜೂ. 9ರಿಂದ ಪಿಯು ತರಗತಿ ಆರಂಭ, ಸಮವಸ್ತ್ರ ಕಡ್ಡಾಯ
ಒಂದು ವೇಳೆ ಅವರು ಹಿಜಾಬ್ ತೆಗೆಯದಿದ್ದರೆ ಕೇಸರಿ ಶಾಲು ಧರಿಸಲು ನಮಗೂ ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಪ್ರಕರಣ ಕುರಿತಂತೆ ಆಡಳಿತ ಮಂಡಳಿಯಾಗಲಿ, ಸ್ಥಳೀಯ ಶಾಸಕರಾಗಲಿ, ಹಿಜಾಬ್ ಧರಿಸಿ ಬಂದಿರುವ ವಿದ್ಯಾರ್ಥಿಗಳಾಗಲಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.
ತರಗತಿಯಲ್ಲಿ ಹಿಜಾಬ್ ನಿಷೇಧ; ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿಗಳಾದ ಜೆಎಂ ಖಾಜಿ ಮತ್ತು ಕೃಷ್ಣ ದೀಕ್ಷಿತ್ ಅವರ ಕರ್ನಾಟಕ ಹೈಕೋರ್ಟ್ ಪೀಠವು ಮಾರ್ಚ್ 15 ರಂದು ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅವಿಭಾಜ್ಯ ಅಂಗವಲ್ಲ ಎಂದು ತೀರ್ಪು ನೀಡಿತ್ತು.
"ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅಗತ್ಯವಾದ ಧಾರ್ಮಿಕ ಆಚರಣೆಯ ಭಾಗವಾಗಿಲ್ಲ ಎಂದು ನಾವು ಪರಿಗಣಿಸಿದ್ದೇವೆ" ಎಂದು ಪೀಠ ಹೇಳಿತ್ತು. ತರಗತಿಯಲ್ಲಿ ಸರ್ಕಾರ ಅಥವಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸುವ ಸಮವಸ್ತ್ರವನ್ನು ಧರಿಸಲು ಮಾತ್ರ ಅವಕಾಶ ಇದೆ ಎಂದು ಹೇಳಿತ್ತು.