ಹದಗೆಟ್ಟ ಹೆದ್ದಾರಿ ದುರಸ್ತಿಗೊಳಿಸಿ, ಜನರ ಪ್ರಾಣ ಉಳಿಸಿ; ದಕ್ಷಿಣ ಕನ್ನಡದಲ್ಲಿ ಭಾರೀ ಪ್ರತಿಭಟನೆ
ಮಂಗಳೂರು, ಸೆಪ್ಟೆಂಬರ್ 11: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನಿಂದ ಮಾಣಿ ಜಂಕ್ಷನ್ ವರೆಗೆ ಸಂಪೂರ್ಣ ಹದೆಗೆಟ್ಟ ಹಿನ್ನೆಲೆಯಲ್ಲಿ ಇಂದು ಭಾರೀ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನಾ ಪಾದಯಾತ್ರೆ ನಡೆಯಿತು.
ಚಂದ್ರಯಾನಕ್ಕಿಂತ ದುಬಾರಿಯಾದ ಬೆಂಗಳೂರು ವೈಟ್ ಟಾಪಿಂಗ್ ರಸ್ತೆಗಳು
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿಂದ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಈ ಸಂದರ್ಭ ವಾಹನ ಸಂಚಾರಕ್ಕೆ ಅಡಚಣೆಯಾಗಿ ಸಾರ್ವಜನಿಕರು ತೊಂದರೆಗೊಳಗಾಗಬೇಕಾಯಿತು. ಕೇಂದ್ರ ಮತ್ತು ರಾಜ್ಯ ಸರಕಾರದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸದೇ ಇರುವುದು ಖಂಡನೀಯ ಎಂದು ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.
"ಬಿಜೆಪಿ ಸಂಸದರು ಕೇವಲ ಓಟಿಗಾಗಿ ನಾಟಕ ಮಾಡುತ್ತಿದ್ದಾರೆ. ಇದರಿಂದಲೇ ಹೆದ್ದಾರಿ ಹದಗೆಟ್ಟು ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಹೆದ್ದಾರಿ ಚತುಷ್ಪಥದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಬಿಜೆಪಿ ಜನಪ್ರತಿನಿಧಿಗಳು ಮತ್ತು ಗುತ್ತಿಗೆ ಕಂಪೆನಿಗಳ ನಡುವಿನ ಶೀತಲ ಸಮರವೇ ಇದಕ್ಕೆ ಕಾರಣ. ಆದರೆ ಭೂಸ್ವಾಧೀನ ಪ್ರಕ್ರಿಯೆಯಿಂದ ವಿಳಂಬವಾಗುತ್ತಿದೆ ಎಂಬ ನೆಪ ಹೇಳುತ್ತಿದ್ದಾರೆ. ಒಂದು ವೇಳೆ ಚತುಷ್ಪಥ ಕಾಮಗಾರಿ ಅರ್ಧಕ್ಕೆ ನಿಂತಿರುವುದಕ್ಕೆ ಭೂಸ್ವಾಧೀನವೇ ನೈಜ ಕಾರಣವಾಗಿದ್ದರೆ, ತಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ" ಎಂದು ಕಾಂಗ್ರೆಸ್ ಮುಖಂಡ ರಮಾನಾಥ್ ರೈ ಘೋಷಿಸಿದರು.