ಮಂಗಳೂರು : ಈ ನೌಕರನ ಸಾವಿಗೆ ಕಾರಣ ಯಾರು?
ಮಂಗಳೂರು, ಜು. 2 : ಸಂಬಳ ಕೈ ಸೇರುವುದು ವಿಳಂಬವಾದ ಹಿನ್ನಲೆಯಲ್ಲಿ ಮನನೊಂದು ಮಂಗಳೂರು ಮಹಾನಗರ ಪಾಲಿಕೆಯ ನೌಕರನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ. ಮೂರು ತಿಂಗಳಿನಿಂದ ಈ ನೌಕರಿಗೆ ವೇತನ ಪಾವತಿಯಾಗಿರಲಿಲ್ಲ ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಶರಣಾದ ನೌಕರನನ್ನು ಯಶವಂತ್ (40) ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ನಗರದಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಯಶವಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 15 ವರ್ಷಗಳಿಂದ ಇವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿದ್ದರು.

ಕಳೆದ ಮೂರು ತಿಂಗಳಿನಿಂದ ಯಶವಂತ್ ಗೆ ಸಂಬಳ ಪಾವತಿಯಾಗಿರಲಿಲ್ಲ ಎಂದು ತಿಳಿದುಬಂದಿದೆ. ಮಹಾನಗರ ಪಾಲಿಕೆಯ ನೀರಾವರಿ ವಿಭಾಗದಲ್ಲಿ ಯಶವಂತ್ ಕಾರ್ಯ ನಿರ್ವಹಿಸುತ್ತಿದ್ದರು. 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರೂ, ಇವರ ನೌಕರಿ ಖಾಯಂ ಆಗಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. [ಮಂಗಳೂರು : ಗುಜರಿ ಅಂಗಡಿ ಬೆಂಕಿಗಾಹುತಿ]
ಯಶವಂತ್ ಅವರಿಗೆ ತಿಂಗಳಿಗೆ 6,500 ರೂ. ಸಂಬಳ ಬರುತ್ತಿತ್ತು ಎಂದು ತಿಳಿದುಬಂದಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ಅವರಿಗೆ ಸಂಬಳ ಬಂದಿರಲಿಲ್ಲ. ಈ ಕುರಿತು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ.
ಎಲ್ಲಾ ಬೆಳವಣಿಗೆಗಳಿಂದ ಬೇಸತ್ತ ಯಶವಂತ್ ಅವರು, ಸೋಮವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications