ಮಂಗಳೂರು ರೈಲು ನಿಲ್ದಾಣದಲ್ಲಿ ವಲಸೆ ಕಾರ್ಮಿಕರ ಪ್ರತಿಭಟನೆ
ಮಂಗಳೂರು, ಮೇ 08 : ಮಂಗಳೂರು ನಗರದಲ್ಲಿ ವಲಸೆ ಕಾರ್ಮಿಕರು ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ತಮ್ಮ ರಾಜ್ಯಕ್ಕೆ ವಾಪಸ್ ಕಳಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
ಶುಕ್ರವಾರ ಮಂಗಳೂರು ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ 100ಕ್ಕೂ ಅಧಿಕ ವಲಸೆ ಕಾರ್ಮಿಕರು ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನೆಡೆಸಿದರು. ಇವರೆಲ್ಲಾ ಜಾರ್ಖಂಡ್ ಮತ್ತು ಬಿಹಾರ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ.
ಕೊರೊನಾ ಸೋಂಕಿನ ವಿಚಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಕಿತ್ತಲೆ ವಲಯದಲ್ಲಿದೆ. ಮಂಗಳೂರಿನ ವಿವಿಧ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರು ತಮ್ಮ ತವರು ರಾಜ್ಯಕ್ಕೆ ತೆರಳಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ವಲಸೆ ಕಾರ್ಮಿಕರನ್ನು ತವರು ರಾಜ್ಯಕ್ಕೆ ಕಳಿಸಲು ಕರ್ನಾಟಕ ಸರ್ಕಾರ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ರೈಲುಗಳನ್ನು ನೀಡಬೇಕು ಎಂದು ನೈಋತ್ಯ ರೈಲ್ವೆಗೆ ಪತ್ರ ಬರೆದಿದೆ. ಕರ್ನಾಟಕದಲ್ಲಿ ಸುಮಾರು 2.04 ಲಕ್ಷ ವಲಸೆ ಕಾರ್ಮಿಕರು ತವರು ರಾಜ್ಯಕ್ಕೆ ಮರಳಲು ನೋಂದಣಿ ಮಾಡಿಸಿದ್ದಾರೆ.
ಬೆಂಗಳೂರಿನ ಮಾದಾವರ ಬಳಿ ಎರಡು ದಿನಗಳ ಹಿಂದೆ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದಿದ್ದರು. ತಕ್ಷಣ ರೈಲುಗಳ ವ್ಯವಸ್ಥೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಪೊಲೀಸರ ಮೇಲೆ ಕಲ್ಲು ತೂರಾಟ ಸಹ ನಡೆಸಿದ್ದರು.
ಮೊದಲ ಹಂತದಲ್ಲಿ ಕರ್ನಾಟಕ ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಮಣಿಪುರ, ತ್ರಿಪುರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಒಡಿಶಾ ರಾಜ್ಯಗಳಿಗೆ ರೈಲುಗಳನ್ನು ಓಡಿಸುತ್ತಿದೆ.
ಸರ್ಕಾರ ಬೆಂಗಳೂರು ನಗರದಲ್ಲಿರುವ ವಲಸೆ ಕಾರ್ಮಿಕರನ್ನು ಮೊದಲು ಶ್ರಮಿಕ್ ವಿಶೇಷ ರೈಲುಗಳ ಮೂಲಕ ತವರು ರಾಜ್ಯಕ್ಕೆ ವಾಪಸ್ ಕಳಿಸುತ್ತಿದೆ.












Click it and Unblock the Notifications