ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ರಮಾನಾಥ ರೈ ಗರಂ
ಮಂಗಳೂರು, ಡಿಸೆಂಬರ್ 25 : ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಕಾರ್ಯವೈಖರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅಸಮಾಧಾನ ವ್ಯಕ್ತಡಿಸಿದ್ದಾರೆ. ತಕ್ಷಣ ಕೈಕಂಬ ಹಾಗೂ ಬಂಟ್ವಾಳ ಬೈಪಾಸ್ ರಸ್ತೆಯನ್ನು ಸುಸ್ಥಿತಿಗೆ ತರುವಂತೆ ಹೆದ್ದಾರಿ ಇಲಾಖಾಧಿಕಾರಿಗಳಿಗೆ ತಾಕೀತು ಮಾಡಿದರು.
ಕೈಕಂಬ ಹಾಗೂ ಬಂಟ್ವಾಳ ಬೈಪಾಸ್ ಹೆದ್ದಾರಿ ಅಗಲೀಕರಣಗೊಳಿಸುವ ನಿಟ್ಟಿನಲ್ಲಿ ರಸ್ತೆಯನ್ನು ಅಗೆಯಲಾಗುತ್ತಿದೆ. ಇದರಿಂದ ನಮಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಶನಿವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಚಿವ ರಮಾನಾಥ ರೈಯವರು ಈ ನಿರ್ದೇಶನ ನೀಡಿದ್ದು ಸದ್ಯಕ್ಕೆ ಬಂಟ್ವಾಳ ಪೇಟೆ ಮತ್ತು ಒಳ ರಸ್ತೆಗಳ ಅಗಲೀಕರಣ ಬೇಡ. ಇಲ್ಲಿನ ವರ್ತಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈಗಾಗಲೇ ಕೈಗೆತ್ತಿಕೊಳ್ಳಲಾದ ಬಿ.ಸಿ.ರೋಡಿನ ಕೈಕಂಬ ಹಾಗೂ ಬಂಟ್ವಾಳ ಬೈಪಾಸ್ ರಸ್ತೆಯ ಅಗಲೀಕರಣದ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.
ಕೈಕಂಬದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಹೆದ್ದಾರಿ ಇಲಾಖೆ ಅಗೆದು ಹಾಕಿ ತಿಂಗಳು ಕಳೆದರೂ ಸರಿಪಡಿಸದಿದ್ದರಿಂದ ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದು ಕಳೆದ ವಾರ ಇಲ್ಲಿನ ಸಾರ್ವಜನಿಕರು ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದರು.
ಹೆದ್ದಾರಿ ಹಾಗೂ ವಿವಿಧ ಇಲಾಖೆಯ ನಡುವಿನ ಸಮನ್ವಯತೆಯ ಕೊರತೆಯಿಂದ ಸಭೆಯಲ್ಲಾದ ಯಾವುದೇ ತೀರ್ಮಾನಗಳು ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಗತವಾಗಿಲ್ಲ ಎಂದು ಸಾರ್ವಜನಿಕರ ವಲಯದಿಂದ ದೂರುಗಳು ಕೇಳಿ ಬಂದಿದೆ.
ಈ ನಡುವೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಕೊನೆಗೂ ಹೆದ್ದಾರಿ ಇಲಾಖೆಗೆ ಬಿಸಿ ಮುಟ್ಟಿದ್ದು, ಸುರತ್ಕಲ್ ಬಿ.ಸಿ.ರೋಡು ಚತುಷ್ಪಥ ರಸ್ತೆಯ ಬಿ.ಸಿ.ರೋಡು ಮೇಲ್ಸೇತುವೆಯ ಇಕ್ಕೆಲಗಳಲ್ಲಿ ಕಟ್ಟಡ ತೆರವಿಗೆ ದಿನಗಣನೆ ಆರಂಭವಾಗಿದೆ.
ಗುರುವಾರ ಬಿ.ಸಿ.ರೋಡಿಗೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಅಜಿತ್ ನೇತೃತ್ವದ ಅಧಿಕಾರಿಗಳ ತಂಡ ಈಗಾಗಲೇ ಪರಿಹಾರ ನೀಡಿ ಸ್ವಾಧೀನ ಪಡಿಸಿಕೊಂಡಿರುವ ಸ್ಥಳಗಳ ಮಾರ್ಕಿಂಗ್ ನಡೆಸಿದ್ದರು.












Click it and Unblock the Notifications