ಡಿಕೆಶಿ ಆಪ್ತ ಮಿಥುನ್ ರೈ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅಮಾನತು
ಮಂಗಳೂರು, ನವೆಂಬರ್. 06: ಮಹತ್ವದ ಬೆಳವಣಿಗೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಕೆ ಶಿವಕುಮಾರ್ ಆಪ್ತ ಮಿಥುನ್ ರೈ ಅವರನ್ನು ಅಮಾನತು ಮಾಡಿ ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವೀಂದ್ರ ದಾಸ್ ಆದೇಶ ಹೊರಡಿಸಿದ್ದಾರೆ.
ನಿನ್ನೆ ಈ ಕುರಿತು ಆದೇಶ ಹೊರಡಿಸಲಾಗಿದ್ದು, ಜಿಲ್ಲಾ ಯುವ ಕಾಂಗ್ರೆಸ್ ಪಾಳಯದಲ್ಲಿ ಗೊಂದಲ ಸೃಷ್ಟಿಯಾಗಿದೆ.
ನಾಲ್ಕು ಕ್ಷೇತ್ರದಲ್ಲಿ ಗೆಲುವು, ಶಿವಮೊಗ್ಗದಲ್ಲಿ ನೈತಿಕ ಗೆಲುವು: ಕುಮಾರಸ್ವಾಮಿ
ಪಕ್ಷ ಸಂಘಟನೆಯಲ್ಲಿ ನಿರಾಸಕ್ತಿ ಹಾಗೂ ಪಕ್ಷದ ಮಹತ್ವದ ಸಭೆಗಳಿಗೆ ಸಕ್ರಿಯವಾಗಿ ಭಾಗಿಯಾಗದ ಹಿನ್ನೆಲೆಯಲ್ಲಿ ಹತ್ತು ಜಿಲ್ಲೆಗಳ ಯುವ ಕಾಂಗ್ರೆಸ್ ಅಧ್ಯಕ್ಷರು ಮತ್ತು ರಾಜ್ಯದ ಕೆಲ ಕಾರ್ಯದರ್ಶಿಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.
ಈ ಬೆಳವಣಿಗೆ ಯುವ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನ ಮೂಡಿಸಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮೂಡಬಿದ್ರೆ ಕ್ಷೇತ್ರದಿಂದ ಸ್ಪರ್ಧಿಸಿಲು ಮಿಥುನ್ ರೈ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಗಾಗಿ ಮಿಥುನ್ ರೈ ಹಾಗೂ ಅಭಯಚಂದ್ರ ಜೈನ್ ಅವರ ನಡುವೆ ಭಾರೀ ಪೈಪೋಟಿ ನಡೆದಿತ್ತು. ಟಿಕೆಟ್ ಅಭಯ ಚಂದ್ರ ಜೈನ್ ಅವರಿಗೆ ದೊರೆತ ಹಿನ್ನೆಲೆಯಲ್ಲಿ ಮಿಥುನ್ ರೈ ಅಸಮಾಧಾನಗೊಂಡಿದ್ದರು. ಆ ಬಳಿಕ ಪಕ್ಷ ಸಂಘಟನೆಯಲ್ಲಿ ಮಿಥುನ್ ರೈ ನಿರಾಸಕ್ತಿ ಹೊಂದಿದ್ದರು ಎಂದು ಹೇಳಲಾಗಿದೆ.
ಒಂದೇ ಒಂದು ಪಾನ್ ಅಲ್ಲಾಡಿಸಿದ್ದಕ್ಕೆ ಡಿಕೆಶಿ ನೀಡಿದ ಖಡಕ್ ಉತ್ತರ ಇದು!
ಈ ಕಾರಣಗಳನ್ನು ಮುಂದಿಟ್ಟುಕೊಂಡು ಈಗ ಮಿಥುನ್ ರೈ ಅವರನ್ನು ಅಮಾನತು ಮಾಡಲಾಗಿದೆ ಎಂದು ವಿಮರ್ಶಿಸಲಾಗುತ್ತಿದೆ. ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪಾಳಯದಲ್ಲಿ ನಡೆದಿರುವ ಈ ಬೆಳವಣಿಗೆ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.