'ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ'
ಮಂಗಳೂರು, ಜನವರಿ 07: ಪೆಟ್ರೋಲ್-ಡಿಸೇಲ್ ಮೇಲೆ ತೆರಿಗೆ ಹೆಚ್ಚಿಸಿ ರಾಜ್ಯ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ಕ್ರಮವಾಗಿ 32% ಮತ್ತು 21% ತೆರಿಗೆಯನ್ನು ಹೆಚ್ಚಿಸುವುದರ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಿದೆ ಎಂದು ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿಯವರು ರಾಜತಾಂತ್ರಿಕ ನಡೆಗಳ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಿ ನಮ್ಮ ದೇಶದ ಜನರಿಗೆ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆಯಾಗುವಂತೆ ದಿಟ್ಟತನದ ಕ್ರಮ ಕೈಗೊಂಡಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ತೆರಿಗೆ ಹೆಚ್ಚಳ ಮಾಡಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಿಸಿರುವುದು ವಿಪರ್ಯಾಸ ಎಂದು ತಿಳಿಸಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಹಿಂದೆ ಪೆಟ್ರೋಲಿಯಂ ಉತ್ಪನ್ನಗಳ ಖರೀದಿಯಲ್ಲಿ ಬಾಕಿ ಇರಿಸಿದ್ದ 2 ಲಕ್ಷ ಕೋಟಿ ರೂಪಾಯಿ ಸಾಲದ ಬಾಂಡ್ ಅನ್ನು ತೀರಿಸಿರುವ ನರೇಂದ್ರ ಮೋದಿಯವರ ಕ್ರಮ ಶ್ಲಾಘನೀಯ ಎಂದು ಹೇಳಿದ ಕಾಮತ್ ಅವರು ಈಗ ಪೆಟ್ರೋಲ್, ಡಿಸೇಲ್ ಬೆಲೆ ಇಳಿದಿರುವಾಗ ಪುನ: ಹೆಚ್ಚಳ ಮಾಡಿರುವ ರಾಜ್ಯ ಸರಕಾರ ಇನ್ಯಾವ ಮುಖ ಇಟ್ಟು ಪ್ರತಿಭಟನೆ ಮಾಡುತ್ತದೆ ಎಂದು ಪ್ರಶ್ನಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಿಂದೆ ಪ್ರಧಾನಿಯವರ ಪ್ರತಿಕೃತಿ ದಹಿಸಿದ್ದರು. ಈಗ ಅವರಿಗೆ ಜನರ ಮುಂದೆ ಹೋಗಲು ಯಾವ ನೈತಿಕತೆ ಇದೆ. ಜನರು ಪೆಟ್ರೋಲ್, ಡಿಸೇಲ್ ಖರೀದಿಸಲು ಪೆಟ್ರೋಲ್ ಬಂಕಿಗೆ ಹೋಗುವಾಗ ಮತ್ತೆ ಬೆಲೆ ಹೆಚ್ಚು ಆಗಿರುವುದರಿಂದ ಸಹಜವಾಗಿ ಇದಕ್ಕೆ ಮೋದಿಯವರೇ ಕಾರಣ ಎಂದು ಅಂದುಕೊಂಡು ಮೋದಿ ಹಾಗೂ ಕೇಂದ್ರ ಸರಕಾರವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಬೇಕು ಎನ್ನುವ ಷಡ್ಯಂತ್ರ ರಾಜ್ಯ ಸರಕಾರದಿಂದ ನಡೆಯುತ್ತಿದೆ ಎಂದು ಆರೋಪಿಸಿದರು.












Click it and Unblock the Notifications