ಡ್ರಗ್ಸ್ ಸೇವನೆಯಿಂದ ಅತ್ಯಾಚಾರದಂತಹ ಘಟನೆಗಳು ಹೆಚ್ಚಿವೆ: ವೇದವ್ಯಾಸ ಕಾಮತ್
ಮಂಗಳೂರು, ನವೆಂಬರ್ 28: ತೋಟ ಬೆಂಗ್ರೆ ಬೀಚ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್ ತೀವ್ರವಾಗಿ ಖಂಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಮಂಗಳೂರಿನ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದಾರೆ.
ಯುವ ಜನಾಂಗ ಗಾಂಜಾ, ಅಫೀಮು, ಚರಸ್ ನಂತಹ ಡ್ರಗ್ಸ್ ಸೇವಿಸುತ್ತಿರುವುದೇ ಇಂತಹ ಘೋರ ಘಟನೆ ನಡೆಯಲು ಕಾರಣವಾಗಿದೆ. ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಕೊನೆಗೊಳಿಸದಿದ್ದರೆ ಇಂತಹ ಘಟನೆಗಳು ಮರುಕಳಿಸುತ್ತಿರುತ್ತವೆ. ಪೊಲೀಸ್ ಇಲಾಖೆ ಡ್ರಗ್ಸ್ ಜಾಲವನ್ನು ಮಟ್ಟ ಹಾಕಲು ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೂ ಶಾಸಕನಾಗಿ ನಾನು ಮುಕ್ತವಾಗಿ ಬೆಂಬಲಿಸುತ್ತೇನೆ ಎಂದು ಹೇಳಿದರು.

ಡ್ರಗ್ಸ್ ಮಾರಾಟಗಾರರನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡರೆ ಡ್ರಗ್ಸ್ ಮಾಫಿಯಾವನ್ನು ನಮ್ಮ ಜಿಲ್ಲೆಯಿಂದಲೇ ಓಡಿಸಬಹುದು. ಶಾಸಕನಾಗಿ ಬಂದ ಬಳಿಕ ಡ್ರಗ್ಸ್ ಜಾಲವನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಏನೆಲ್ಲ ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆನೂ ಹಿಂದೆಯೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು.
ಬೆಂಗ್ರೆ ಪ್ರದೇಶದಲ್ಲಿ ಪೊಲೀಸ್ ಹೊರ ಠಾಣೆಯ ಅಗತ್ಯ ಇದೆ ಎನ್ನುವುದರ ಬಗ್ಗೆ ಈಗಾಗಲೇ ಮಂಗಳೂರು ಪೊಲೀಸ್ ಕಮೀಷನರ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲಿ ಆ ಬಗ್ಗೆ ಸೂಕ್ತ ವ್ಯವಸ್ಥೆ ಆಗಬೇಕಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಸುಸಜ್ಜಿತ ಪೊಲೀಸ್ ಠಾಣೆಯನ್ನು ನಿರ್ಮಿಸಲು ಉನ್ನತ ಪೊಲೀಸ್ ಅಧಿಕಾರಿಗಳು ಪ್ರಸ್ತಾಪನೆ ನೀಡಿದಲ್ಲಿ ರಾಜ್ಯಮಟ್ಟದಲ್ಲಿ ಗೃಹ ಇಲಾಖೆ ಮತ್ತು ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಸಿ ಬೆಂಗ್ರೆ ಪ್ರದೇಶದಲ್ಲಿ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯ ನಿರ್ಮಾಣಕ್ಕೆ ಶ್ರಮಿಸುವುದಾಗಿ ಶಾಸಕರು ಹೇಳಿದರು.












Click it and Unblock the Notifications