ರಾಜ್ಯದಿಂದ ಲೆಕ್ಕ ಕೇಳಲು ನರೇಂದ್ರ ಮೋದಿ ಚಕ್ರವರ್ತಿಯಲ್ಲ: ರಮಾನಾಥ ರೈ
ಮಂಗಳೂರು, ಮಾರ್ಚ್ 24: ರಾಜ್ಯ ಸರಕಾರದಿಂದ ಲೆಕ್ಕ ಕೇಳಲು ನರೇಂದ್ರ ಮೋದಿ ಚಕ್ರವರ್ತಿಯಲ್ಲ. ಲೆಕ್ಕ ಕೊಡೋಕೆ ನಾವೇನು ಸಾಮಂತ ರಾಜರುಗಳಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲೆಕ್ಕ ಕೊಡುವ ಪದ್ಧತಿ ಇಲ್ಲ ಎಂದು ತಿಳಿಸಿದರು.
ಚಕ್ರವರ್ತಿಗೆ ಸಾಮಂತರಸರು ಮಾತ್ರ ಲೆಕ್ಕ ಕೊಡಬೇಕಷ್ಟೆ. ಪ್ರಧಾನಿ ನರೇಂದ್ರ ಮೋದಿ ದೇಶದ ಚಕ್ರವರ್ತಿಯಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಮಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜನಾಶೀರ್ವಾದ ಸಮಾವೇಶ ಯಶಸ್ವಿಯಾಗಿರುವುದು ಜಿಲ್ಲೆಯಲ್ಲಿ ಜಾತ್ಯಾತೀತ ಶಕ್ತಿಗಳು ಪ್ರಬಲಗೊಳ್ಳುತ್ತಿರುವುದರ ಸಂಕೇತ ಎಂದು ಅವರು ಅಭಿಪ್ರಾಯಪಟ್ಟರು.

ಸಮಾವೇಶದಲ್ಲಿ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಅವರ ಭಾಷಣ ಅದ್ಭುತವಾಗಿತ್ತು. ರಾಹುಲ್ ಗಾಂಧಿ ಅವರು ಮೋದಿ ಅವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈ ಕುರಿತು ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು. ಮುಂಬರುವ ಚುನಾವಣೆಗೆ ಪಕ್ಷದ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರಿಗೆ ಪಕ್ಷ ಯಾವುದೇ ಸ್ಥಾನ, ಜವಾಬ್ದಾರಿ ನೀಡಿದರೂ ಅದಕ್ಕೆ ಬದ್ದರಾಗಿ ಇರುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ಆದರೆ ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದರು.
ರಾಹುಲ್ ಗಾಂಧಿ ಕುದ್ರೋಳಿ ದೇವಸ್ಥಾನಕ್ಕೆ ಹೋಗುವ ವ್ಯವಸ್ಥೆ ಮಾಡಿದ್ದು ನಾನೇ ಎಂದು ಹೇಳಿದ ಅವರು, ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟರಲ್ಲಿ ಎಂಟೂ ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications