ಮಂಗಳೂರು; ನೈತಿಕ ಪೊಲೀಸ್ ಗಿರಿ, ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು

ಮಂಗಳೂರು, ಸೆಪ್ಟೆಂಬರ್ 28; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ಬೆಳ್ತಂಗಡಿ, ಪುತ್ತೂರಿನಲ್ಲಿ ನಡೆದ ಘಟನೆಯ ಬಳಿಕ ಮಂಗಳೂರು ಹೊರವಲಯದ ಸುರತ್ಕಲ್ ಎಂಬಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ.

ಮಂಗಳೂರಿನ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿಗಳಿದ್ದ ವಾಹನ ಅಡ್ಡಗಟ್ಟಿ ಹಲ್ಲೆ ನಡೆಸಿದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. 5 ಆರೋಪಿಗಳು ಬಂಧನವಾದ ಕೆಲವೇ ಕ್ಷಣಗಳಲ್ಲಿ ಠಾಣಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಕಳೆದ ಭಾನುವಾರ ವಿದ್ಯಾರ್ಥಿಗಳಿದ್ದ ವಾಹನ ಅಡ್ಡಗಟ್ಟಿ ಹಲ್ಲೆ ಮಾಡಿದ್ದ ಘಟನೆ ನಡೆದಿತ್ತು. ಬೊಲೆರೋ ವಾಹನದಲ್ಲಿ ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಕಾಲೇಜಿನ ಮೆಡಿಕಲ್ ಕಾಲೇಜಿನ ಯುವಕ-ಯುವತಿಯರು ಉಡುಪಿಯ ಮಲ್ಪೆ ಬೀಚ್‌ಗೆ ತೆರಳಿದ್ದರು.

Moral Policing At Surathkal Accused Gets Station Bail

ಅಲ್ಲಿಂದ ಹಿಂದಿರುಗಿ ಸಂಜೆ ಮಂಗಳೂರಿನತ್ತ ಬರುತ್ತಿದ್ದ ಸಂದರ್ಭದಲ್ಲಿ ಸುರತ್ಕಲ್ ಟೋಲ್ ಗೇಟ್ ಬಳಿ ಹಿಂದೂ ಸಂಘಟನೆಗೆ ಸೇರಿದ ಯುವಕರ ಗುಂಪು ವಾಹನವನ್ನು ಅಡ್ಡಗಟ್ಟಿದ್ದಾರೆ. ಅವಾಚ್ಯ ಶಬ್ದಗಳಲ್ಲಿ ಬೈದು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಅದೇ ಮಾರ್ಗವಾಗಿ ಬರುತ್ತಿದ್ದ ಟ್ರಾಫಿಕ್ ಪೊಲೀಸ್ ಇನ್ಸ್‌ಪೆಕ್ಟರ್ ಶರೀಫ್ ಹಲ್ಲೆ ತಡೆದಿದ್ದಾರೆ. ಯುವಕರನ್ನು ಚದುರಿಸಿ ಅನಾಹುತವನ್ನು ತಪ್ಪಿಸಿದ್ದಾರೆ.

ಯುವಕರ ಗುಂಪು ತಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿದೆ ಎಂದು ವಿದ್ಯಾರ್ಥಿಗಳು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು 5 ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಭಜರಂಗದಳ ಜಿಲ್ಲಾ ಮುಖಂಡ ಪ್ರೀತಂ ಶೆಟ್ಟಿ, ಭಜರಂಗದಳ ಸುರತ್ಕಲ್ ಪ್ರಖಂಡ ಪ್ರಮುಖ್ ಹರ್ಷಿತ್, ಶ್ರೀನಿವಾಸ್, ರಾಕೇಶ್ ಮತ್ತು ಅಭಿಷೇಕ್ ಎಂದು ಗುರುತಿಸಲಾಗಿದೆ. ಆದರೆ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಆರೋಪಿಗಳು ಠಾಣಾ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 323, 504 ಅಡಿ ಪ್ರಕರಣ ದಾಖಲಿಸಿ ಬಿಡುಗಡೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, "ನೈತಿಕ ಪೋಲಿಸ್ ಗಿರಿ ಪ್ರಕರಣದಲ್ಲಿ ಐವರ ಬಂಧನವಾಗಿದೆ. ಮೂವರು ಯುವತಿಯರು, ಮೂವರು ಯುವಕರು ಮಲ್ಪೆ ಬೀಚ್‌ಗೆ ಹೋಗಿದ್ದರು. 6 ಜನರು ಕೂಡ ದೇರಳಕಟ್ಟೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ" ಎಂದು ಹೇಳಿದ್ದಾರೆ.

"ಮಲ್ಪೆಯಿಂದ ಬರುವಾಗ ಕಾರು ಅಡ್ಡಗಟ್ಟಿ ಹಲ್ಲೆ ಮಾಡಲಾಗಿದೆ. 6 ಜನರಲ್ಲಿ ಓರ್ವ ಯುವಕನಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ವಿದ್ಯಾರ್ಥಿ ಓರ್ವ ನೀಡಿದ ದೂರಿನ್ವಯ ಹಲ್ಲೆ ಮಾಡಿದವರ ಬಂಧನವಾಗಿದೆ. ಐದು ಜನ ಕೂಡ ಒಂದೇ ತರಗತಿಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇನ್ನು ಇಂತಹ ಘಟನೆಗಳು ಮರುಕಳಿಸದಂತೆ ನಗರದ ಎಲ್ಲಾ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರ ಪಹರೆ ಹೆಚ್ಚಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಪೆಟ್ರೋಲಿಂಗ್ ಹೆಚ್ಚಿಸಲು ಸೂಚನೆ ನೀಡಲಾಗಿದೆ" ಎಂದು ಆಯುಕ್ತರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳ ಅಂತರದಲ್ಲಿ ಮೂರು ನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಡೆದಿದೆ. ಮೊದಲು ಬಂಟ್ವಾಳ ಕಾರಿಂಜ ಎಂಬಲ್ಲಿ ಅನ್ಯಧರ್ಮದ ವಿದ್ಯಾರ್ಥಿಗಳೊಂದಿಗೆ ಬಂದಿದ್ದ ಹಿಂದೂ ಯುವತಿ ಮೇಲೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿದ್ದರು. ವಿದ್ಯಾರ್ಥಿಗಳನ್ನು ಸಾಲಿನಲ್ಲಿ ಕೂರಿಸಿ ಹಲ್ಲೆ ಮಾಡಿದ್ದರು.

ಇತ್ತೀಚೆಗೆ ಪುತ್ತೂರಿನಲ್ಲಿ ಪೊಲೀಸ್ ಕೇಸ್ ಹಿನ್ನಲೆ ಬೆಂಗಳೂರಿನಿಂದ ಬಂದಿದ್ದ ಹಿಂದೂ ಮಹಿಳೆ ಅನ್ಯಧರ್ಮದ ವ್ಯಕ್ತಿಯೊಂದಿಗೆ ಮೂರು ದಿನಗಳ ಕಾಲ ಲಾಡ್ಜ್ ನಲ್ಲಿ ತಂಗಿದ್ದರು. ಈ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿದ್ದರು. ಇದಾದ ಬಳಿಕ ಕೆಲವೇ ದಿನದ ಅಂತರದಲ್ಲಿ ಮೂರನೇ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ.‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+