ಮಂಗಳೂರಿನಲ್ಲಿ ಇರುವುದು ತಾಲಿಬಾನ್ಗಳ ಸರ್ಕಾರನಾ?
ಮಂಗಳೂರು, ಸೆಪ್ಟೆಂಬರ್ 28: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸದ್ದು ಮಾಡಿದೆ. ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘಟನೆಯನ್ನು ಖಂಡಿಸಿದ್ದಾರೆ.
ಮಂಗಳವಾರ ಸಿದ್ದರಾಮಯ್ಯ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಸನ್ಮಾನ್ಯ ಮುಖ್ಯಮಂತ್ರಿ ಅವರೇ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ?, ತಾಲಿಬಾನ್ಗಳದ್ದಾ?" ಎಂದು ಪ್ರಶ್ನೆ ಮಾಡಿದ್ದಾರೆ.
ಭಾನುವಾರ ಸಂಜೆ ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಹೋಗಿ ವಾಪಾಸ್ ಬರುವಾಗ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವಿದಾಗಿದೆ.

ಅನ್ಯಕೋಮಿನ ಯುವಕ-ಯುವತಿಯರಿದ್ದ ಕಾರನ್ನು ತಡೆದು ಹಲ್ಲೆ ಮಾಡಲಾಗಿದೆ. ಯುವತಿಯರಿಗೆ ಮುಸ್ಲಿಂ ಯುವಕರ ಜೊತೆ ಏಕೆ ಸುತ್ತಾಡುತ್ತೀರಿ? ಎಂದು ಪ್ರಶ್ನಿಸಿ ನಿಂದಿಸಲಾಗಿದೆ.
ಸನ್ಮಾನ್ಯ @CMofKarnataka ಅವರೇ,
— Siddaramaiah (@siddaramaiah) September 28, 2021
ಮಂಗಳೂರಿನಲ್ಲಿ ಇರುವುದು @BJP4Karnataka ಸರ್ಕಾರನಾ? ತಾಲಿಬಾನ್ಗಳದ್ದಾ? pic.twitter.com/zfprzRcNBd
ಯುವಕರ ಗುಂಪು ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದಾಗ ಸ್ಥಳದಲ್ಲಿ ಪೊಲೀಸರು ಸಹ ಇದ್ದರು. ಪೊಲೀಸ್ ಇನ್ಸ್ಪೆಕ್ಟರ್ ಶರೀಫ್ ಹಲ್ಲೆ ತಡೆಯಲು ಮುಂದಾಗಿದ್ದು, ಹಲ್ಲೆ ಮಾಡಲು ಬಂದ ಯುವಕರನ್ನು ಬಂಧಿಸಿದರು.
ಸುರತ್ಕಲ್ ಠಾಣೆ ಪೊಲೀಸರು ಹಲ್ಲೆ ನಡೆಸಿದ್ದ ಐವರು ಯುವಕರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳವಾರ ಈ ವಿಚಾರ ಬೆಳಕಿಗೆ ಬಂದಿದ್ದು ದೊಡ್ಡ ಸುದ್ದಿಯಾಗಿದೆ.
ಸುರತ್ಕಲ್ ಟೋಲ್ ಗೇಟ್ ಬಳಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಉಡುಪಿಯ ಮಲ್ಪೆ ಬೀಚ್ಗೆ ತೆರಳಿ ವಾಪಾಸ್ ಆಗುತ್ತಿದ್ದ ಮಂಗಳೂರು ನಗರದ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಯುಕವರ ಗುಂಪು ಅಡ್ಡಗಟ್ಟಿತ್ತು.
ಅನ್ಯಕೋಮಿನ ವಿದ್ಯಾರ್ಥಿಗಳು ಎನ್ನುವ ಮಾಹಿತಿ ತಿಳಿದು ಅವರ ಕಾರನ್ನು ಅಡ್ಡ ಹಾಕಲಾಗಿತ್ತು. ಕಾರನ್ನು ಅಡ್ಡ ಹಾಕಿ ಹಿಂದೂ ಕಾರ್ಯಕರ್ತರು ಗೂಂಡಾಗಿರಿ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
ಪೊಲೀಸ್ ಆಯುಕ್ತರ ಹೇಳಿಕೆ; ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ, "ಒಬ್ಬ ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಐವರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುತ್ತದೆ" ಎಂದು ಹೇಳಿದ್ದಾರೆ.
"ಕಾರನ್ನು ಅಡ್ಡಗಟ್ಟಿದವರು ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಂತರ ನಮ್ಮ ಟ್ರಾಫಿಕ್ ಇನ್ಸ್ಪೆಕ್ಟರ್ ಖಾಸಗಿ ಕೆಲಸದ ನಿಮಿತ್ತ ರಸ್ತೆಯಲ್ಲಿ ಹೋಗುತ್ತಿದ್ದಾಗ ಈ ಘಟನೆ ನೋಡಿ ಪ್ರಶ್ನಿಸಿದ್ದಾರೆ. ಓರ್ವ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ದೂರು ದಾಖಲಿಸಿದ್ದಾನೆ" ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ನೈತಿಕ ಪೊಲೀಸ್ ಗಿರಿ ಘಟನೆ ದಕ್ಷಿಣ ಕನ್ನಡದಲ್ಲಿ ಪದೇ ಪದೇ ವರದಿಯಾಗುತ್ತಿದೆ. ಈ ತಿಂಗಳಿನಲ್ಲಿಯೇ ಎರಡು ಬಾರಿ ಇಂತಹ ಘಟನೆಗಳು ನಡೆದಿವೆ. ಭಾನುವಾರ ಸಹ ಇದೇ ಮಾದರಿಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ಬಂಧಿಸಲಾಗಿದೆ.
ಬಂಧಿತರನ್ನು ಪ್ರೀತಂ ಶೆಟ್ಟಿ, ಅರ್ಶಿತ್, ಶ್ರೀನಿವಾಸ್, ರಾಕೇಶ್ ಮತ್ತು ಅಭಿಷೇಕ್ ಎಂದು ತಿಳಿದಯಬಂದಿದೆ. ಆರೋಪಿಗಳ ವಿರುದ್ಧ ಸೆಕ್ಷನ್ 341, 323 ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಗೃಹ ಸಚಿವರ ಪ್ರತಿಕ್ರಿಯೆ; ಮಂಗಳೂರಿನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ, "ಮಂಗಳೂರಿನಲ್ಲಿ ನಡೆದ ನೈತಿಕ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಇಂತಹ ಪ್ರಕರಣ ನಡೆಯದಂತೆ ಕ್ರಮ ವಹಿಸಲಾಗುತ್ತಿದೆ. ನೈತಿಕ ಪೊಲೀಸ್ಗಿರಿ ನಡೆಸುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications