ವಿಜಯ ಬ್ಯಾಂಕ್ ವಿಲೀನಕ್ಕೆ ವಿರೋಧ: ಎಚ್ಚೆತ್ತುಕೊಂಡ ಬಿಜೆಪಿ
ಮಂಗಳೂರು, ಜನವರಿ 09: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುಟ್ಟಿ ರಾಷ್ಟ್ರದ ಉದ್ದಗಲಕ್ಕೂ ಬೆಳೆದ ಪ್ರತಿಷ್ಠಿತ ವಿಜಯಾ ಬ್ಯಾಂಕ್ ವಿಲೀನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರ ಸರಕಾರದ ಈ ಬ್ಯಾಂಕ್ ವಿಲೀನ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ರಸ್ತೆಗಿಳಿದು ಹೋರಾಟ ಆರಂಭಿಸಿದೆ.
ಮಾಜಿ ಸಚಿವ ಬಿ ರಮಾನಾಥ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯಾ ಬ್ಯಾಂಕ್ ವಿಲೀನ ವಿಚಾರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ತೀವ್ರ ತರಾಟೆಗೆ ತೆಗೆದು ಕೊಳ್ಳಲಾಗಿತ್ತು. ಸಾಮಾಜಿಕ ಜಾಲತಾಣ ಗಳಲ್ಲೂ ಸಂಸದರು,ರಾಜ್ಯದ ಕೇಂದ್ರ ಸಚಿವರ ಆಕ್ಷೇಪಗಳು ಕೇಳಿ ಬಂದಿದ್ದವು.
ಇತರ ಬ್ಯಾಂಕ್ ಗಳೊಂದಿಗೆ ವಿಜಯಾ ಬ್ಯಾಂಕ್ ವಿಲೀನಕ್ಕೆ ವಿರೋಧ ಹೆಚ್ಚುತ್ತಿದಂತೆ ಬಿಜೆಪಿ ಎಚ್ಚೆತ್ತುಕೊಂಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮುಂಬೈ ಸಂಸದ ಗೋಪಾಲ ಶೆಟ್ಟಿ ಇವರನ್ನೊಳಗೊಂಡ ನಿಯೋಗವು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ವಿಜಯಾ ಬ್ಯಾಂಕ್ ನ್ನು ಬ್ಯಾಂಕ್ ಆಫ್ ಬರೋಡಾ ಮತ್ತು ದೇನಾ ಬ್ಯಾಂಕುಗಳೊಂದಿಗೆ ವಿಲೀನ ಮಾಡಿರುವುದನ್ನು ಮರುಪರಿಶೀಲಿಸುವಂತೆ ನಿಯೋಗ ಆಗ್ರಹಿಸಿದೆ. ಹಾಗೂ ವಿಲೀನಗೊಂಡ ಈ ಬ್ಯಾಂಕ್ ಗೆ "ವಿಜಯಾ ಬ್ಯಾಂಕ್" ಎಂದು ನಾಮಕರಣ ಮಾಡಿ ವಿಜಯಾಬ್ಯಾಂಕಿನ ಹೆಸರನ್ನು ಉಳಿಸಿಕೊಡುವಂತೆ ಸಂಸದರ ನಿಯೋಗ ಅರುಣ್ ಜೇಟ್ಲಿ ಅವರಿಗೆ ಮನವಿ ಮಾಡಿದೆ. ಸಂಸದರ ಮನವಿಗೆ ಹಣಕಾಸು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications