ಗೋ ಕಳ್ಳತನ ವಿರುದ್ಧ ಕಠಿಣ ಕ್ರಮಕ್ಕೆ ಸಂಸದ ನಳಿನ್ ಆಗ್ರಹ
ಮಂಗಳೂರು, ಜೂನ್ 26: ಗೋವುಗಳ ಕಳ್ಳತನ ಹಾಗೂ ಅಕ್ರಮ ಸಾಗಾಟ ನಡೆಸುವ ಮೂಲಕ ಮತಾಂಧ ಶಕ್ತಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ಷಡ್ಯಂತ್ರ ನಡೆಸಿವೆ. ಪೊಲೀಸ್ ಇಲಾಖೆ ಇಂಥ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಾಟ ಪ್ರಕರಣಗಳು ಹೆಚ್ಚಾಗಿದ್ದು, ಇತ್ತೀಚೆಗೆ, ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿ ಪ್ರಕರಣ ಬೆಳಕಿಗೆ ಬಂದಿತ್ತು. ಗೋವುಗಳ ಅಕ್ರಮ ಸಾಗಾಟಕ್ಕೆ ಮುಸ್ಲಿಂ ಸಂಘಟನೆಗಳೂ ವಿರೋಧ ವ್ಯಕ್ತಪಡಿಸಿ, ಸಾಗಾಟ ಮಾಡುವವರ ವಿರುದ್ಧ ಫತ್ವಾ ಹೊರಡಿಸುವಂತೆ ಆಗ್ರಹಿಸಿದ್ದವು.

ಇದೀಗ ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಮಾರಕಾಯುಧ ಬಳಸಿ ಹಟ್ಟಿಯಿಂದ ಗೋವುಗಳನ್ನು ಕಳ್ಳತನ ಮಾಡುವ ಪ್ರಕರಣ ಪ್ರತಿದಿನ ನಡೆಯುತ್ತಿದೆ. ಇದರಿಂದ ಹೈನುಗಾರರು, ರೈತರು ಆತಂಕದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಇಷ್ಟಾಗಿಯೂ ಸರ್ಕಾರ ಏನೂ ಕ್ರಮ ತೆಗೆದುಕೊಳ್ಳದೇ ಮೌನ ವಹಿಸಿದೆ. ಗೋವುಗಳನ್ನು ಕದ್ದು ಹತ್ಯೆ ಮಾಡುತ್ತಿರುವುದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗುತ್ತಿದೆ ಎಂಬುದನ್ನು ಗಮನಿಸಬೇಕು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಸದರು ತಿಳಿಸಿದ್ದಾರೆ.












Click it and Unblock the Notifications