ಡಂಪಿಂಗ್ ಯಾರ್ಡ್ ಕುಸಿತಕ್ಕೆ ಅವೈಜ್ಞಾನಿಕ ಕ್ರಮಗಳೇ ಕಾರಣ– ನಳಿನ್ ಕುಮಾರ್ ಕಟೀಲ್
ಮಂಗಳೂರು, ಆಗಸ್ಟ್ 15: ಮಂಗಳೂರಿನ ಹೊರವಲಯದ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡ್ ತ್ಯಾಜ್ಯ ಕುಸಿತ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ. ಭರತ್ ಶೆಟ್ಟಿ ಇಂದು ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.
ಕುಸಿಯುತ್ತಿದೆ ಕಸದ ರಾಶಿ, ಮಂದಾರದ 23 ಕುಟುಂಬ ಸ್ಥಳಾಂತರ
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, "ತ್ಯಾಜ್ಯ ಕುಸಿಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ವಿವಿಧ ಇಲಾಖೆಯ ಅಧಿಕಾರಿಗಳ ಮತ್ತು ತಜ್ಞರ ತಂಡವನ್ನು ಶೀಘ್ರದಲ್ಲಿ ಇಲ್ಲಿಗೆ ಕಳುಹಿಸಿಕೊಡಲಿದ್ದು, ತಜ್ಞರು ನೀಡುವ ವರದಿ ಆಧಾರದ ಮೇಲೆ ಈ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.
"ಪಚ್ಚನಾಡಿಯ ಡಂಪಿಂಗ್ ಯಾರ್ಡ್ ನಲ್ಲಿ ಸೇರಿದ ನೀರು ಹರಿದು ಆಸುಪಾಸಿನ ಬಾವಿಗಳನ್ನು ಸೇರುತ್ತಿವೆ. ಕುಡಿಯುವ ನೀರಿನ ಯೋಜನೆಗಳು ಹಾಳಾಗುತ್ತಿವೆ. ಅವೈಜ್ಞಾನಿಕವಾದ ಈ ಡಂಪಿಂಗ್ ಯಾರ್ಡ್ ಗೆ ಕಳೆದ ಆರೇಳು ವರ್ಷಗಳಿಂದ ಪಾಲಿಕೆಯಲ್ಲಿ ಆಡಳಿತ ಮಾಡುತ್ತಿದ್ದ ಸರಕಾರ, ಆಗಿನ ಉಸ್ತುವಾರಿ ಸಚಿವರು, ಆಗಿನ ಮೇಯರುಗಳೇ ನೇರ ಕಾರಣ" ಎಂದು ಅವರು ಆರೋಪಿಸಿದರು.