ಪುತ್ತೂರು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗಳ ಆಗರ
ಮಂಗಳೂರು, ಸೆಪ್ಟೆಂಬರ್ 25 : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಅವರು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 'ಪುತ್ತೂರು ಸರ್ಕಾರಿ ಆಸ್ಪತ್ರೆಯ ವ್ಯವಸ್ಥೆ ತುಂಬಾ ಕೆಟ್ಟ ಸ್ಥಿತಿಯಲ್ಲಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ನಾಗಲಕ್ಷ್ಮೀ ಬಾಯಿ ಅವರು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಮಾತನಾಡಿದ ಅವರು, 'ರಾಜ್ಯದ ಬಹುತೇಕ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದೇನೆ. ಈ ಪೈಕಿ ಪುತ್ತೂರು ಆಸ್ಪತ್ರೆ ವ್ಯವಸ್ಥೆ ತುಂಬಾ ಕೆಟ್ಟ ಸ್ಥಿತಿಯಲ್ಲಿದೆ. ಈ ಬಗ್ಗೆ ಶಾಸಕಿ ಹಾಗೂ ಆರೋಗ್ಯ ಸಚಿವರ ಜತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ' ಎಂದರು.

'ವೈದ್ಯರ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದೆ ಮತ್ತು ಇಲ್ಲಿನ ಸರ್ಕಾರಿ ಆಸ್ಪತ್ರೆ ಸ್ವಚ್ಚವಾಗಿರಬಹುದು ಎಂಬ ನನ್ನ ನಿರೀಕ್ಷೆ ಹುಸಿಯಾಗಿದೆ. ಆಸ್ಪತ್ರೆ ಗೋಡೆಗಳಲ್ಲಿ ಪಾಚಿ ಬೆಳೆದಿದೆ, ಶೌಚಾಲಯದ ನೀರು ವರಾಂಡದಲ್ಲಿ ಹರಿದಾಡುತ್ತಿದೆ' ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
'ಆಸ್ಪತ್ರೆ ಕಟ್ಟಡವನ್ನು ನವೀಕರಣಗೊಳಿಸಿ ಹೊಸ ರೂಪ ನೀಡುವ ಬಗ್ಗೆ ಚಿಂತಿಸಲಾಗುವುದು. ಫಿಸಿಶಿಯನ್ ಇಲ್ಲದ ಕಾರಣ ರೋಗಿಗಳಿಗೆ ಸಮರ್ಪಕ ಚಿಕಿತ್ಸೆಯೂ ದೊರೆಯುತ್ತಿಲ್ಲ. ನರ್ಸ್ಗಳ ಕೊರತೆಯೂ ಕಂಡುಬರುತ್ತಿದೆ. ಇದರಿಂದಾಗಿ ಆಸ್ಪತ್ರೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಯುತ್ತದೆ' ಎಂದರು.
'ಜಿಲ್ಲೆಯಲ್ಲಿ ಮಹಿಳೆಯರ ಕಣ್ಮರೆ, ನಾಪತ್ತೆ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಇಂದು ಆಯೋಗದ ಜಿಲ್ಲಾ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಲಾಗುತ್ತದೆ. ಎಸ್ಪಿ ಸೂಕ್ತ ಉತ್ತರ ನೀಡಬೇಕು, ಮಾತ್ರವಲ್ಲ ತಹಶೀಲ್ದಾರ್ಗಳು ಸಭೆಯಲ್ಲಿ ಹಾಜರಿರಲಿದ್ದಾರೆ. ಅವರಿಂದ ಸಮಗ್ರ ಮಾಹಿತಿ ಪಡೆದುಕೊಳ್ಳುತ್ತೇನೆ' ಎಂದು ಭರವಸೆ ನೀಡಿದರು.
ಶಾಸಕಿ ಶಕುಂತಳಾ ಶೆಟ್ಟಿ, ಆರೋಗ್ಯಾಕಾರಿ ಸುಶೀಲಾ ಪಿ.ಎಸ್., ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ, ಸಿಡಿಪಿಒ ಶಾಂತಿ ಹೆಗ್ಡೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












Click it and Unblock the Notifications