ತುಳುನಾಡಿನಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ
Recommended Video

ಮಂಗಳೂರು, ಆಗಸ್ಟ್ 15: ಪರಶುರಾಮ ಸೃಷ್ಟಿಯ ತುಳುನಾಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರಪಂಚಮಿಯನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು.
ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಮುಂಜಾನೆಯೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ನಾಗ ದೇವನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಪಾರ್ಥನೆ ನೇರವೇರಿಸಿದರು.
ದೇವಾಳದ ನಾಗ ಬನದಲ್ಲಿ ನಾಗದೇವರಿಗೆ ದೇವಾಳದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಹಾಲು, ಕ್ಷೀರಾ, ತುಪ್ಪ, ಜೇನಿನೊಂದಿಗೆ ಪಂಚಾಮೃತ ಆಭಿಷೇಕವನ್ನು ಮಾಡಿ ವಿಶೇಷ ಪೂಜೆ ನೆರವೇರಿಸಿದರು. ಈ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರೆ ನಾಗ ದೋಷ ಪರಿಹಾರ, ಸಂತಾನ ಪ್ರಾಪ್ತಿ ಹಾಗೂ ರೋಗ ರುಜಿನಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಭಕ್ತರದ್ದು.

ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಕುಟುಂಬವೂ ನಾಗನ ವಿಗ್ರಹಗಳಿಗೆ ಹಾಲು ಹಾಗೂ ಸೀಯಾಳಾಭಿಷೇಕವನ್ನು ಮಾಡುವ ಮೂಲಕ ನಾಗನ ಮೇಲಿರುವ ನಂಬಿಕೆ ಹಾಗೂ ಭಕ್ತಿಯನ್ನು ಸಾದರಪಡಿಸುತ್ತದೆ.

ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಜಿಲ್ಲೆಯ ಕುಕ್ಕೆ ಸುಬ್ರಮಣ್ಯದಲ್ಲಿಯೂ ನಾಗರಪಂಚಮಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ದೇಶದೆಲ್ಲೆಡೆಯಿಂದ ಬಂದ ಭಕ್ತಾಧಿಗಳು ನಾಗನ ವಿಗ್ರಹಕ್ಕೆ ಹಾಲಿನ ಹಾಗೂ ಸೀಯಾಳಾಭಿಷೇಕ ಮಾಡುವ ಮೂಲಕ ಭಕ್ತಿಯನ್ನು ಸಮರ್ಪಿಸಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ನೆರೆದಿದ್ದು, ನಾಗನ ವಿಗ್ರಹಕ್ಕೆ ಹಾಲೆರೆಯಲು ಸರತಿ ಸಾಲಿನಲ್ಲಿ ನಿಂತಿರುವುದು ಎಲ್ಲೆಡೆ ಕಂಡು ಬರುತ್ತಿತ್ತು. ದೇವಸ್ಥಾನಗಳಲ್ಲಿ ಮಾತ್ರವಲ್ಲದೆ ಪ್ರತಿಯೊಂದು ಕುಟುಂಬದ ಮೂಲ ಮನೆಗಳಲ್ಲಿಯೂ ನಾಗನಿಗೆ ಹಾಲಿನಭಿಷೇಕವನ್ನು ಮಾಡುವ ಸಂಪ್ರದಾಯ ತುಳುನಾಡಿನಲ್ಲಿ ಅನಾದಿ ಕಾಲದಿಂದಲೂ ಬೆಳೆದುಕೊಂಡು ಬಂದಿದೆ.












Click it and Unblock the Notifications