Lok Sabha Election 2024: ನಳಿನ್ ಕುಮಾರ್ ಕಟೀಲ್ಗೆ ಮಹತ್ವದ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್
ಬೆಂಗಳೂರು, ಮಾರ್ಚ್ 28: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಈ ಬಾರಿ ಹಲವು ಹಾಲಿ ಸಂಸದರಿಗೆ ಕೋಕ್ ನೀಡಲಾಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.
ಈ ಪೈಕಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ಗೂ ಕೂಡ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ಇದರ ಬೆನ್ನಲ್ಲೇ ಮಹತ್ವದ ಜವಾಬ್ದಾರಿಯನ್ನು ಬಿಜೆಪಿ ನಳೀನ್ ಕುಮಾರ್ ಕಟೀಲ್ ಹೆಗಲಿಗೆ ನೀಡಿದೆ.

ಬಿಜೆಪಿ ಕಾರ್ಯಕರ್ತನಾಗಿ, ಸಂಸದನಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿರುವ ನಳೀನ್ ಕುಮಾರ್ ಕಟೀಲ್ಗೆ ಈ ಬಾರಿ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಕಮಲ ಅರಳಿಸಬೇಕು ಎನ್ನುವ ಬಹುದೊಡ್ಡ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್ ನಳೀನ್ ಕುಮಾರ್ ಕಟೀಲ್ಗೆ ನೀಡಿದೆ.
ಈ ಬಾರಿ ದಕ್ಷಿಣ ಭಾರತ ರಾಜ್ಯಗಳ ಮೇಲೆ ಹೆಚ್ಚಿನ ಗಮನ ವಹಿಸಿರುವ ಬಿಜೆಪಿ ವರಿಷ್ಠರು ಶತಾಯಗಾತಾಯ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎನ್ನುವ ಗುರಿಯಲ್ಲಿದ್ದಾರೆ. ಹೀಗಾಗಿ ಕೇರಳ ಜೊತೆಗೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಉತ್ತರ ಪ್ರದೇಶದ ಮಾಜಿ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರನ್ನು ಮಹಾರಾಷ್ಟ್ರದ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಹರಿಯಾಣ ಬಿಜೆಪಿಯ ಮಾಜಿ ಮುಖ್ಯಸ್ಥ ಓಪಿ ಧನಕರ್ ಅವರನ್ನು ದೆಹಲಿಯ ಉಸ್ತುವಾರಿಗೆ ನೇಮಿಸಲಾಗಿದೆ.
ಕರ್ನಾಟಕದ ಶಾಸಕ ಅಭಯ್ ಪಾಟೀಲ್ಗೆ ತೆಲಂಗಾಣಕ್ಕೆ ಮತ್ತು ಅವಿನಾಶ್ ರೈ ಖನ್ನಾ ಅವರನ್ನು ತ್ರಿಪುರಕ್ಕೆ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕರ್ನಾಟಕ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್ ಕುಮಾರ್ ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.












Click it and Unblock the Notifications