ದ.ಕ. ಜಿಲ್ಲೆಯಲ್ಲಿ ಮತ್ತೂ ಹೆಚ್ಚಾಗಬಹುದು ವೈರಸ್; ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಕಾದಿರಿಸಲು ನಳಿನ್ ಸೂಚನೆ
ಮಂಗಳೂರು, ಜೂನ್ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದ್ದು, ವೆನ್ ಲಾಕ್ ಆಸ್ಪತ್ರೆ ಸಾಮರ್ಥ್ಯ ಮೀರಬಹುದು. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಾಸಿಗೆಗಳನ್ನು ಕಾದಿರಿಸಬೇಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಸೋಮವಾರ ಜೂನ್ 29ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸರ್ಕಾರದ ಮಾರ್ಗಸೂಚಿಯ ಅನ್ವಯ ನಿವೃತ್ತಿ ಹೊಂದಿದ ಎಂಬಿಬಿಎಸ್ ಅಥವಾ ಆಯುಷ್ ವೈದ್ಯಾಧಿಕಾರಿಗಳನ್ನು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು. ನರ್ಸಿಂಗ್ ಸಿಬ್ಬಂದಿ ಕೊರತೆಯಾದರೆ ಖಾಸಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸೇವೆಯನ್ನು ಪಡೆಯುವ ಕಡೆ ಚಿಂತಿಸಬೇಕು ಎಂದು ತಿಳಿಸಿದರು.
ಮಂಗಳೂರು; ಕೋವಿಡ್ ಚಿಕಿತ್ಸೆಗೆ 30 ಆಸ್ಪತ್ರೆ ಗುರುತಿಸಿದ ಸರ್ಕಾರ; 12 ಆಸ್ಪತ್ರೆಗಳ ಒಪ್ಪಿಗೆ
ಕೊರೊನಾ ಸೋಂಕಿತರನ್ನು ದಾಖಲಿಸಿಕೊಂಡ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದ ಜೊತೆ ನೇರ ಸಂಪರ್ಕದಲ್ಲಿದ್ದು, ಪ್ರತಿ ಕೊರೊನಾ ರೋಗಿಯ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡುತ್ತಿರಬೇಕು. ಆಸ್ಪತ್ರೆಗಳಲ್ಲಿ ಆಂಬುಲೆನ್ಸ್ ಕೊರತೆ ಉಂಟಾಗದಂತೆ ಎಚ್ಚರವಹಿಸಿ. ಅಗತ್ಯವೆನಿಸಿದರೆ ವೈದ್ಯಕೀಯ ಕಾಲೇಜುಗಳಿಂದ ಬಾಡಿಗೆಗೆ ಆಂಬುಲೆನ್ಸ್ ಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೊರೊನಾ ಸೋಂಕಿತ ರೋಗಿಯ ಶವಸಂಸ್ಕಾರವನ್ನು ನಡೆಸುವಾಗ ಸರ್ಕಾರದ ಮಾರ್ಗಸೂಚಿಯಂತೆ ಪಿಪಿಟಿ ಕಿಟ್ ಧರಿಸಿರುವ, ಸಂಬಂಧಪಟ್ಟ ಸಿಬ್ಬಂದಿ ಮಾತ್ರ ಪಾಲ್ಗೊಳ್ಳಬೇಕು. ಅನ್ಯ ವ್ಯಕ್ತಿಗಳಿಗೆ ಅಲ್ಲಿ ಹಾಜರಿರಲು ಅವಕಾಶ ನೀಡಬಾರದು. ಅಂಥವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ನಳಿನ್ ಕುಮಾರ್ ಕಟೀಲು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮತ್ತಿತರರು ಇದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 695 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ.