"ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಸಿಬಿಐ ಬಳಸುತ್ತಿತ್ತೆಂದು ಒಪ್ಪಿಕೊಂಡಂತಾಗಿದೆ"
ಮಂಗಳೂರು, ಅಕ್ಟೋಬರ್ 5: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಉದ್ದೇಶದಿಂದ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದು, "ಈ ಮೂಲಕ ರಾಜಕೀಯ ವಿರೋಧಿಗಳನ್ನು ಹಣಿಯಲು ಸಿಬಿಐ ಅನ್ನು ಕಾಂಗ್ರೆಸ್ ಬಳಸುತ್ತಿತ್ತೆಂದು ಒಪ್ಪಿಕೊಂಡಂತಾಗಿದೆ" ಎಂದು ಟಾಂಗ್ ನೀಡಿದ್ದಾರೆ.
ಸಿಬಿಐ ದಾಳಿ ಕುರಿತು ಕಾಂಗ್ರೆಸ್ ನಾಯಕರ ಆರೋಪದ ಕುರಿತು ಟ್ವೀಟ್ ಮಾಡಿರುವ ಅವರು, ''ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ, ಇಷ್ಟು ವರ್ಷ ಸಿಬಿಐ ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ!!'' ಎಂದಿದ್ದಾರೆ.
"ಎಲ್ಲವನ್ನೂ ಮೀರಿ ಬರುವ ಶಕ್ತಿ ಶಿವಕುಮಾರ್ ಗೆ ಇದೆ"
''ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಇಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿವೆ. ವಿವಿಧ ಹಂತಗಳಲ್ಲಿ ಅದರ ವಿಚಾರಣೆ ಸಾಗಿದೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ' ಎಂದಿದ್ದಾರೆ. ''ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು, ಸಿಬಿಐ ದಾಳಿ ವಿರೋಧಿಸುತ್ತಿರುವುದು ಅವರು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರದ್ದೂ ಪಾಲು ಇದೆಯೆಂದು ತೋರಿಸಿದಂತೆ ಆಗಿದೆ'' ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕನಕಪುರದಲ್ಲಿನ ನಿವಾಸದ ಮೇಲೆ ಇಂದು ಬೆಳಿಗ್ಗೆ ಸಿಬಿಐ ದಾಳಿ ನಡೆಸಿದ್ದು, ಈ ದಾಳಿಯನ್ನು ಹಲವು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು, ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಕಾರಣ ಕಾಂಗ್ರೆಸ್ ಮುಖಂಡ ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.