ರಾಷ್ಟ್ರೀಯ ಮಹಿಳಾ ಆಯೋಗದಿಂದ ಪುತ್ತೂರಿನ ಅತ್ಯಾಚಾರ ಸಂತ್ರಸ್ತೆ ಶಿಕ್ಷಣ
ಮಂಗಳೂರು, ಜುಲೈ 9: ಪುತ್ತೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿಗೆ ಹೊರ ಜಿಲ್ಲೆಯಲ್ಲಿ ಶಿಕ್ಷಣ ನೀಡಲು ರಾಷ್ಟ್ರೀಯ ಮಹಿಳಾ ಆಯೋಗ ನಿರ್ಧರಿಸಿರುವುದಾಗಿ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ತಿಳಿಸಿದ್ದಾರೆ.
ಸಾಮೂಹಿಕ ಅತ್ಯಾಚಾರದ ವಿಡಿಯೋ ವೈರಲ್ ಮಾಡಿದ ಮತ್ತೆ ಮೂವರ ಬಂಧನ
ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಯಿಂದ ವಿದ್ಯಾರ್ಥಿನಿ ಮಾನಸಿಕವಾಗಿ ಕುಗ್ಗಿದ್ದಾಳೆ. ಓದಿನಲ್ಲಿ ಮುಂದಿರುವ ಆಕೆ ವಿದ್ಯಾಭ್ಯಾಸ ಮುಂದುವರಿಸುವ ಇಚ್ಛೆ ವ್ಯಕ್ತಪಡಿಸಿದ್ದಾಳೆ. ಆಕೆಯ ತಾಯಿಯೂ ತನ್ನ ಮಗಳು ಉನ್ನತ ಅಧಿಕಾರಿ ಆಗಬೇಕೆಂಬ ಕನಸು ಇಟ್ಟುಕೊಂಡಿದ್ದಾರೆ. ಆಕೆ ತನ್ನ ಕಾಲಿನ ಮೇಲೆ ತಾನು ನಿಲ್ಲಲು ಅನುಕೂಲವಾಗುವಂತೆ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದರು.
ಸಂತ್ರಸ್ತೆಯು ಆರ್ಥಿಕವಾಗಿ ಸಬಲಳಾಗಲು ಆಯೋಗ ಈಗಾಗಲೇ ಸೂಕ್ತ ಕ್ರಮ ಕೈಗೊಂಡಿದ್ದು ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರವಾಗಿ ವಿದ್ಯಾರ್ಥಿನಿಯ ಬ್ಯಾಂಕ್ ಖಾತೆಗೆ ಇಂದು 4,12,250 ರೂಪಾಯಿ ಜಮೆಯಾಗಲಿದೆ ಎಂದು ತಿಳಿಸಿದರು. ಇನ್ನುಳಿದ ನಾಲ್ಕು ಲಕ್ಷ ರೂಪಾಯಿಯನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಅವರು ಹೇಳಿದರು.
ರಾಷ್ಟ್ರೀಯ ಮಹಿಳಾ ಆಯೋಗ ವಾರದ ಹಿಂದೆಯೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.