Mangaluru cooker blast: ಸುಟ್ಟಗಾಯಗಳಿಂದ ಚೇತರಿಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್ಐಎ
ಸುಟ್ಟಗಾಯಗಳಿಂದ ಚೇತರಿಸಿಕೊಂಡಿರುವ ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧವಾಗಿದೆ.
ಮಂಗಳೂರು, ಜನವರಿ, 30: ಸುಟ್ಟಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಚೇತರಿಸಿಕೊಂಡಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸುಟ್ಟ ಗಾಯಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಮೊಹಮ್ಮದ್ ಶಾರಿಕ್ ಗಾಯಗಳಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರು ಚೇತರಿಸಿಕೊಂಡ ನಂತರ, ಎನ್ಐಎ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 19 ರಂದು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೈಯಲ್ಲಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡು ಶಾರಿಕ್ ಗಾಯಗೊಂಡಿದ್ದರು. ಆತನೊಂದಿಗೆ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಗಾಯಗೊಂಡಿದ್ದಾರೆ.

ಆರೋಪಿ ಮೊಹಮ್ಮದ್ ಶಾರಿಕ್ಗೆ ಶೇಕಡಾ 40ರಷ್ಟು ಸುಟ್ಟ ಗಾಯಗಳಾಗಿವೆ. ಪ್ರಕರಣ ಕುರಿತು ತನಿಖೆ ನಡೆಸಲು ಆರೋಪಿ ಬದುಕುಳಿಯುವುದು ಅನಿವಾರ್ಯವಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮೊಹಮ್ಮದ್ ಶಾರಿಕ್, ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ನಿಂದ ಪ್ರೇರಿತನಾಗಿದ್ದನು, ಶಿವಮೊಗ್ಗ ಪಟ್ಟಣದಲ್ಲಿ ಇದೇ ರೀತಿಯ ಐಎಸ್ ನೆಲೆಯನ್ನು ಸ್ಥಾಪಿಸಲು ಯೋಜಿಸುತ್ತಿದ್ದನು ಎಂದು ಆರೋಪಿಸಲಾಗಿದೆ.
ಆಪಾದಿತ ಐಎಸ್-ಪ್ರೇರಿತ ಭಯೋತ್ಪಾದನಾ ಗುಂಪು ಕೆಲವು ಸಾರ್ವಜನಿಕ ಆಸ್ತಿಗಳನ್ನು ಧ್ವಂಸಗೊಳಿಸಿ, ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದಿದ್ದ ನಂತರ ಈ ಘಟಕವನ್ನು ಪೊಲೀಸರು ಭೇದಿಸಿದ್ದರು. ಬಳಿಕ ಬಂಧಿತರು ತಮ್ಮ ಯೋಜನೆಗಳನ್ನು ಬಹಿರಂಗಪಡಿಸಿದ್ದಾರೆ. ಆಘಾತಕಾರಿ ಮಾಹಿತಿಗಳನ್ನು ಹೊರಹಾಕಿದ್ದ ಈ ಬಂಧಿತರು, ತುಂಗಾ ನದಿಯ ದಡದಲ್ಲಿ ಪ್ರಾಯೋಗಿಕ ಸ್ಫೋಟವನ್ನು ನಡೆಸಿದ್ದೇವೆ ಎಂದು ಒಪ್ಪಿಕೊಂಡಿದ್ದರು.

ಇನ್ನು, ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ, ಅವರ ಚಿಕಿತ್ಸಾ ವೆಚ್ಚ ಗಗನ ಮುಟ್ಟಿದ್ದು, ಆರ್ಥಿಕ ಸಹಾಯದ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಮಾತ್ರ ಹಿಂತಿರುಗಿ ನೋಡಿಲ್ಲ ಎಂದು ಆರೋಪಿಸಲಾಗಿದೆ.
ಚಿಕಿತ್ಸೆಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ 50 ಸಾವಿರ, ವಿದ್ಯುತ್ ಸಚಿವ ವಿ.ಸುನೀಲ್ ಕುಮಾರ್ ಅವರು ವೈಯಕ್ತಿಕವಾಗಿ 25 ಸಾವಿರ ರೂಪಾಯಿ ನೀಡಿದ್ದಾರೆ. ಇದರ ಹೊರತು ಸರ್ಕಾರದಿಂದ ಆರ್ಥಿಕ ಸಹಾಯವಾಗಿಲ್ಲ, ಮುಖ್ಯಮಂತ್ರಿಗಳ ಸಹಾಯಹಸ್ತಕ್ಕಾಗಿ ಕಾಯುತ್ತಿದ್ದೇವೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.












Click it and Unblock the Notifications