ಮಂಗಳೂರಿನಲ್ಲಿ ರಾತ್ರಿ ಕರ್ಫ್ಯೂ: ರಸ್ತೆಗೆ ಬಂದ್ರೆ ವಾಹನ ಜಪ್ತಿ; ಪೊಲೀಸ್ ಆಯುಕ್ತ
ಮಂಗಳೂರು, ಏಪ್ರಿಲ್ 10: ರಾಜ್ಯದ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂವನ್ನು ಕಠಿಣಗೊಳಿಸಲು ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕರ್ಫ್ಯೂ ಬಿಗಿಗೊಳಿಸಲು ಮಂಗಳೂರು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್, ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 45 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಪ್ರತಿ ಚೆಕ್ ಪೋಸ್ಟ್ ಗೆ ಒಬ್ಬ ಇನ್ಸ್ಪೆಕ್ಟರ್ ಮತ್ತು ಹತ್ತು ಸಿಬ್ಬಂದಿ ನಿಯೋಜಿಸಲಾಗಿದೆ. ಅನಾವಶ್ಯಕವಾಗಿ ತಿರುಗಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದರು.
ರಾತ್ರಿ ಪಾಳಿ ಕೆಲಸ ಇದ್ದವರು 10 ಗಂಟೆಯ ಒಳಗೆ ಕೆಲಸಕ್ಕೆ ಹಾಜರಾಗಬೇಕು. ಅದಕ್ಕಿಂತ ಮೊದಲು ಕೆಲಸ ಇದ್ದವರು 10 ಗಂಟೆಯ ಒಳಗೆ ಮನೆ ಸೇರಬೇಕು. ಅಗತ್ಯ ಸೇವಾ ವಸ್ತುಗಳ ವಾಹನ ಹೊರತುಪಡಿಸಿ ಬೇರೆ ಯಾವುದೇ ಕಾರಣಕ್ಕೂ, ಯಾರಿಗೂ ಅವಕಾಶ ಕೊಡೋದಿಲ್ಲ ಎಂದು ಪೊಲೀಸ್ ಕಮೀಷನರ್ ಸ್ಪಷ್ಟಪಡಿಸಿದ್ದಾರೆ.

ಅನಾವಶ್ಯಕವಾಗಿ ತಿರುಗಾಡುವವ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರ ವಾಹನಗಳನ್ನು ಜಪ್ತಿ ಮಾಡಲು ಸೂಚಿಸಲಾಗಿದೆ. ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲವೆಂದು ಕಮೀಷನರ್ ಶಶಿಕುಮಾರ್ ತಿಳಿಸಿದರು.
ಅಲ್ಲದೆ ಎಲ್ಲಾ ಸಿಬ್ಬಂದಿಗಳಿಗೆ ಕೋವಿಡ್ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದ್ದು, ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಕೈಗೆ ಸಾನಿಟೈಸರ್ ಹಾಕಬೇಕು. ಕಾರ್ಯಾಚರಣೆ ಸಂದರ್ಭದಲ್ಲಿ ಸಾರ್ವಜನಿಕರ ಜೊತೆ ಮೃದುವಾಗಿ ವರ್ತಿಸಲು ಸೂಚನೆ ನೀಡಿದ್ದೇನೆ ಎಂದು ಕಮೀಷನರ್ ಶಶಿಕುಮಾರ್ ಇದೇ ವೇಳೆ ಹೇಳಿದರು.












Click it and Unblock the Notifications