ನವೆಂಬರ್ 13ರಂದು ಕರ್ನಾಟಕ ಬಂದ್ ಇಲ್ಲ
ಮಂಗಳೂರು, ನವೆಂಬರ್ 12 : ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಮತ್ತು ಮಡಿಕೇರಿಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯದರ್ಶಿ ಕುಟ್ಟಪ್ಪ ಅವರು ಸಾವನ್ನಪ್ಪಿದ ಘಟನೆಯನ್ನು ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸಲಾಗುತ್ತದೆ. ಕರ್ನಾಟಕ ಬಂದ್ ಇರುವುದಿಲ್ಲ ಎಂದು ಹಿಂದೂ ಸಂಘಟನೆಗಳು ಸ್ಪಷ್ಟಪಡಿಸಿವೆ.
ನವೆಂಬರ್ 13ರ ಶುಕ್ರವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಆಚರಣೆ ಮಾಡುವುದಿಲ್ಲ. ಬದಲಾಗಿ ಬೆಳಗ್ಗೆ 11ರಿಂದ 12 ಗಂಟೆ ತನಕ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೃಹತ್ ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ಸಂಘಟನೆಗಳ ಮುಖಂಡರಾದ ಜಗದೀಶ್ ಶೇಣವ ಮತ್ತು ಶರಣ್ ಪಂಪ್ವೆಲ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಿಂದೂ ಸಂಘಟನೆಗಳ ಪ್ರಮುಖರು ನ. 11ರಂದು ಮಂಗಳೂರಿನ ಸಂಘ ನಿಕೇತನದಲ್ಲಿ ಸಭೆ ಸೇರಿ ಈ ತೀರ್ಮಾನ ಕೈಗೊಂಡಿದ್ದಾರೆ. ಆದ್ದರಿಂದ ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ. [ನವೆಂಬರ್ 13ರಂದು ಕರ್ನಾಟಕ ಬಂದ್]
ಉನ್ನತ ಮಟ್ಟದ ಸಭೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ. 13ರ ಬಂದ್ ಕರೆಯ ವದಂತಿಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. [ಕೊಡಗಿನಲ್ಲಿ ಬೂದಿಮುಚ್ಚಿದ ಕೆಂಡದಂಥ ವಾತಾವರಣ]
ಶುಕ್ರವಾರ ಯಾವುದೇ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಅವಕಾಶವಿಲ್ಲ. ಈಗಾಗಲೇ ಅನುಮತಿ ನೀಡಿರುವ ಸಮಾರಂಭಗಳ ಅನುಮತಿಯನ್ನು ಹಿಂಪಡೆಯಲಾಗುವುದು. ಅಂದು ಬಾರ್ ಮತ್ತು ಮದ್ಯದಂಗಡಿ ಸೇರಿದಂತೆ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. [ಮಡಿಕೇರಿ ಗಲಭೆ : ಕುಟ್ಟಪ್ಪ ಕುಟುಂಬಕ್ಕೆ 5 ಲಕ್ಷ ಪರಿಹಾರ]
ನೌಕರರ ರಜೆ ರದ್ದು : ನವೆಂಬರ್ 13ರ ಶುಕ್ರವಾರ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ರಜೆಗೆ ಅವಕಾಶವಿಲ್ಲ. ಈಗಾಗಲೇ ರಜೆಯಲ್ಲಿ ತೆರಳಿರುವ ನೌಕರರಿಗೆ ರಜೆ ರದ್ದುಪಡಿಸಿ, ಕರ್ತವ್ಯಕ್ಕೆ ವಾಪಸ್ ಆಗಲು ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.












Click it and Unblock the Notifications