ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಭಿನ್ನಾಭಿಪ್ರಾಯವಿಲ್ಲ: ಧರ್ಮೇಂದ್ರ ಪ್ರಧಾನ್
ಮಂಗಳೂರು, ಏಪ್ರಿಲ್ 22: ಅಭ್ಯರ್ಥಿಗಳ ಘೋಷಣೆ ಆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಆಕಾಂಕ್ಷಿಗಳಿಗೆ ನೋವಾಗಿರಬಹುದು. ಆದರೆ ಆ ಎಲ್ಲಾ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸಲಾಗುವುದು. ಜಿಲ್ಲೆಯಲ್ಲಿ ಬಂಡಾಯದ ಪರಿಸ್ಥಿತಿ ಇಲ್ಲ. ಚುನಾವಣೆಗೆ ಯಾವುದೇ ಸಮಸ್ಯೆಯಾಗುವುದಿಲ್ಲಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಮುಖಂಡರ ನಡುವೆ ಭಿನ್ನಾಭಿಪ್ರಾಯ, ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯಲ್ಲಿ ಬಂಡಾಯ ಏಳುವ ಮುಖಂಡರಿಲ್ಲ. ಎಲ್ಲರೂ ಪಕ್ಷದ ನಿಷ್ಠಾವಂತ ಸಿಪಾಯಿಗಳು. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಗೊಂದಲ ಸೃಷ್ಠಿಯಾಗುವ ಪ್ರಶ್ನೆ ಇಲ್ಲ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ತುಷ್ಟೀಕರಣ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಲ್ಲಿ ಅಭಿವೃದ್ದಿ ಮರೀಚಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ರಾಜ್ಯದಲ್ಲಿ ಜನ ವಿರೋಧಿ ನೀತಿ ಅನುಸರಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ಸನ್ನು ತಿರಸ್ಕರಿಸಲು ಜನರು ತೀರ್ಮಾನಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಗೆಲುವು ಸಾಧಿಸಿ ಬಿಜೆಪಿ ಸರಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಬಿಜೆಪಿ ಕಟಿಬದ್ಧವಾಗಿದ್ದು, ಅಭಿವೃದ್ಧಿಯನ್ನೇ ಮೂಲಮಂತ್ರವಾಗಿಸಿಕೊಂಡು ಬಿಜೆಪಿ ರಾಜ್ಯದಲ್ಲಿ ಮುಂಬರುವ ಚುನಾವಣೆ ಎದುರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಏಪ್ರಿಲ್ 28ರ ಬಳಿಕ ಕರ್ನಾಟಕದಲ್ಲಿ ಬದಲಾವಣೆ ಕಾಣಲಿದೆ. ಚುನಾವಣೆಯ ದಿಕ್ಕೇ ಬದಲಾಗಲಿದೆ. ಏಪ್ರಿಲ್ 28ರ ಬಳಿಕ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಆರಂಭಿಸಲಿದ್ದಾರೆ ಎಂದು ಅವರು ತಿಳಿಸಿದರು. ರಾಜ್ಯದ ಕರಾವಳಿ ಭಾಗದಲ್ಲೂ ಮೋದಿ ಪ್ರಚಾರಕ್ಕೆ ಆಗಮಿಸಲಿದ್ದು ಉಡುಪಿಗೆ ಮೇ 1 ರಂದು ಹಾಗು ಮೇ 7 ರಂದು ಮಂಗಳೂರಿಗೆ ಮೋದಿ ಭೇಟಿ ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣದ ವಿರುದ್ಧ ಕೇಂದ್ರ ಸರಕಾರ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ. ಬಾಲಕಿಯರ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ ನೀಡುವ ಹಾಗೆ ಪೋಕ್ಸೋ ಕಾನೂನಿಗೆ ತಿದ್ದುಪಡಿ ತರಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.












Click it and Unblock the Notifications