ದಕ್ಷಿಣ ಕನ್ನಡ ಜಿಲ್ಲೆಯ ಘಟಾನುಘಟಿಗಳ ನಾಮಪತ್ರ ಸಲ್ಲಿಕೆ ಗುರುವಾರ ಆರಂಭ
ಮಂಗಳೂರು ಏಪ್ರಿಲ್ 18: ಮುಂಬರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಬಂಟ್ವಾಳ ಕ್ಷೇತ್ರದ ಜೆಡಿಯು ಅಭ್ಯರ್ಥಿ ಬಾಲಕೃಷ್ಣ ಪೂಜಾರಿ ಜಿಲ್ಲೆಯ ಪ್ರಥಮ ನಾಮಪತ್ರವನ್ನು ಮಂಗಳವಾರವೇ ಸಲ್ಲಿಸಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಿಸಲಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ್ ರೈ, ಮೂಡಬಿದರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಅಭಯಚಂದ್ರ ಜೈನ್ , ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ಸೇರಿದಂತೆ ಮಂಗಳೂರು ಉತ್ತರ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಮುನೀರ್ ಕಾಟಿಪಳ್ಳ ನಾಳೆ ಏಪ್ರಿಲ್ 19 ರಂದು ನಾಮ ಪತ್ರ ಸಲ್ಲಿಸಲಿದ್ದಾರೆ.
ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿಗಳ ಸಂಕ್ಷಿಪ್ತ ಪರಿಚಯ
ಏಪ್ರಿಲ್ 20 ರಂದು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ . ಅಂಗಾರ , ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ವಸಂತ ಬಂಗೇರ, ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್, ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ , ಮಂಗಳೂರು ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ನಿತಿನ್ ಕುಮಾರ್ ಕುತ್ತಾರ್ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಏಪ್ರಿಲ್ 22 ರಂದು ಹಾಗೂ ಮುಲ್ಕಿ-ಮೂಡಬಿದರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಏಪ್ರಿಲ್ 19 ಅಥವಾ 23 ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.
ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ , ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ, ಸಿಪಿಐಎಂ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್, ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ , ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯ್ದಿನ್ ಬಾವಾ, ಎಸ್ ಡಿಪಿಐ ಅಭ್ಯರ್ಥಿ ಜಲೀಲ್ ಕೃಷ್ಣಾಪುರ, ಮೂಡಬಿದ್ರೆ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಯಾದವ ಶೆಟ್ಟಿ ಏಪ್ರಿಲ್ 23 ರಂದು ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಈ ನಡುವೆ ಮಂಗಳೂರು, ಮಂಗಳೂರು ಉತ್ತರ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಇನ್ನು ಕಗ್ಗಂಟಾಗಿಯೇ ಉಳಿದಿದೆ. ಜೆಡಿಎಸ್ ಕೂಡ ಈ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.