ನಿಪಾಹ್ ವೈರಸ್ ಆಯ್ತು, ಇದೀಗ ಸಾಂಕ್ರಾಮಿಕ ರೋಗಗಳ ಸರದಿ
ಮಂಗಳೂರು, ಮೇ 25 : ಮಂಗಳೂರಿನಲ್ಲಿ ಮಾರಣಾಂತಿಕ ನಿಪಾಹ್ ವೈರಸ್ ಅತಂಕ ದೂರವಾಗುತ್ತಿದ್ದಂತೆ, ಇನ್ನೊಂದೆಡೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣ ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಮಂಗಳೂರಿನಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಸೃಷ್ಠಿಯಾಗುತ್ತಿದೆ. ಮಲೇರಿಯಾ, ಡೆಂಗ್ಯೂ, ಇಲಿ ಜ್ವರ ದಂತಹದ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಇಲ್ಲೊಂದು ಅಲ್ಲೊಂದು ಕಾಣಿಸಿಕೊಳ್ಳಲು ಆರಂಭವಾಗಿದೆ.
ಈ ಹಿನ್ನೆಲೆಯಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ಮಳೆಗಾಲದ ಸಾಂಕ್ರಾಮಿಕ ರೋಗಗಳ ತಡೆಗೆ ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಜನರಿಗೆ ರೋಗ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಸೂಚನೆ ಆರೋಗ್ಯ ಇಲಾಖೆಯಿಂದ ನೀಡಲಾಗುತ್ತಿದೆ.
ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮೀಣ ಪ್ರದೇಶ ಸೇರಿದಂತೆ ನಗರ ಪ್ರದೇಶದ ಮನೆ ಮನೆಗಳಿಗೆ ತೆರಳಿ ಸಾಂಕ್ರಾಮಿಕ ರೋಗದ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಜನರಲ್ಲಿ ಅರಿವು ಮೂಡಿಸಲು ಆರಂಭಿಸಿದ್ದಾರೆ.
ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸಲಿರುವ ಹಿನ್ನೆಲೆಯಲ್ಲಿ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಜನರಿಗೆ ಸೂಚನೆ ನೀಡಲಾಗುತ್ತಿದ್ದು, ಮನೆಗಳ ಸುತ್ತಮುತ್ತ ಮಳೆ ನೀರು ಜಮಾ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹೇಳಲಾಗುತ್ತಿದೆ.












Click it and Unblock the Notifications