Tulu Language : ಭಾಷೆ ರಾಜ್ಯದ 2ನೇ ಅಧಿಕೃತ ಭಾಷೆ ಸ್ಥಾನಮಾನ, ವರದಿ ನೀಡಲು ಸಮಿತಿ ರಚಿಸಿದ ಸರ್ಕಾರ
ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಇದೀಗ ರಾಜ್ಯ ಸರ್ಕಾರ 2ನೇ ಅಧಿಕೃತ ರಾಜ್ಯ ಭಾಷೆಯಾಗಿ ಮಾಡಲು ಅಧ್ಯಯನ ನಡೆಸಿ ವರದಿ ನೀಡುವಂತೆ ಸಮಿತಿ ರಚಿಸಿದೆ
ಮಂಗಳೂರು, ಜನವರಿ 31: ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆಯಾಗಿ ಘೋಷಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ನೀಡುವಂತೆ ಡಾ.ಮೋಹನ್ ಆಳ್ವ ನೇತೃತ್ವದ ಸಮಿತಿಯನ್ನು ರಚಿಸಿ ರಾಜ್ಯ ಸರಕಾರ ಸೂಚನೆ ನೀಡಿದೆ.
ಡಾ.ಕೇಶವ ಬಂಗೇರಾ, ಡಾ.ಮಾಧವ ಕೊಣಾಜೆ, ಗಣೇಶ್ ಅಮೀನ್ ಸಂಕಮಾರ್, ಪೃಥ್ವಿರಾಜ್ ಕವತ್ತಾರು ಮಣಿಪಾಲ, ವಸಂತ್ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವಾ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರನ್ನು ಈ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ.
— Sunil Kumar Karkala (@karkalasunil) January 30, 2023
ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹಲವಾರು ಸಂಘ-ಸಂಸ್ಥೆಗಳು, ಸಾರ್ವಜನಿಕರಿಂದ ಸರಕಾರಕ್ಕೆ ಮನವಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಾಲಿ ಇರುವ ನಿಯಮಗಳು ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಈ ಕುರಿತು ಸಾಧಕ - ಬಾಧಕಗಳ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಿ ವಾಸ್ತವಾಂಶದ ವರದಿಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯ ಸರ್ಕಾರ ನಿರ್ದೇಶನ ಮಾಡಿತ್ತು.
ಅದರಂತೆ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಒಂದು ವಾರದಲ್ಲಿ ವರದಿ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ಆದೇಶಿಸಿದ್ದಾರೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಟ್ವೀಟ್ ಕೂಡಾ ಮಾಡಿದ್ದಾರೆ.
ಆದರೆ ಚುನಾವಣೆ ಹತ್ತಿರ ಬರುವ ಸಂಧರ್ಭದಲ್ಲಿ ಇದೊಂದು ಗಿಮಿಕ್ ಅಂತಾ ತುಳು ಭಾಷಾ ಹೋರಾಟಗಾರರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೈ ತುಳುನಾಡು ಸಂಘಟನೆಯ ಪ್ರಮುಖ ಸುದರ್ಶನ್ ಸುರತ್ಕಲ್, "ಈಗ ಸಮಿತಿ ರಚನೆ ಆಗಿರುವುದು ಖುಷಿಯ ವಿಚಾರ ಆದರೆ ಈ ಹಿಂದೆಯೇ ಸುನೀಲ್ ಕುಮಾರ್ ಕಾನೂನು-ನಿಯಮ ಅಂತಾ ಮಾತನಾಡಿದ್ದಾರೆ. ವಿಧಾನಸೌಧದ ಕಲಾಪದಲ್ಲಿ ತುಳು ಭಾಷೆಗೆ ಅಧೀಕೃತ ಸ್ಥಾನಮಾನ ಕುರಿತಾಗಿ ಒಂದು ಶಬ್ಧವೂ ಸುನೀಲ್ಕುಮಾರ್ ಮಾತನಾಡಿಲ್ಲ. ತುಳು ಭಾಷೆಯನ್ನು ಎಂಟನೇ ಪರಿಚ್ಛೇಧಕ್ಕೆ ಸೇರಿಸಬೇಕೆಂದು ಸಾಕಷ್ಟು ಸಮಯದಿಂದ ಹೋರಾಟ ಮಾಡುತ್ತಿದ್ದರೂ ಈ ಬಗ್ಗೆ ಪ್ರತಿಕ್ರಿಯೆಯನ್ನೂ ನೀಡಲಿಲ್ಲ. ಈಗ ಸರ್ಕಾರ ಚುನಾವಣೆಗೆ ಎರಡು ತಿಂಗಳು ಮಾತ್ರ ಇರುವಾಗ ಸಮಿತಿ ಅಂತಾ ಹೊರಟಿದ್ದಾರೆ. ಇದು ಚುನಾವಣಾ ಗಿಮಿಕ್ ಎನ್ನುವುಉ ಸ್ಪಷ್ಟ. ಇದರ ಹೊರತಾಗಿಯೂ ಎರಡು ತಿಂಗಳ ಒಳಗಾಗಿ ತುಳು ಭಾಷೆಗೆ ಸ್ಥಾನಮಾನ ನೀಡಿದರೆ ಸ್ವಾಗತ ಮಾಡುತ್ತೇವೆ" ಎಂದು ಹೇಳಿದ್ದಾರೆ