ಶೀಘ್ರದಲ್ಲೇ ಆನ್ಲೈನ್ ಲೋನ್, ಗೇಮ್ ಆ್ಯಪ್ಗಳು ಬ್ಯಾನ್: ಸಿಎಂ ಸಿದ್ದರಾಮಯ್ಯ
ಮಂಗಳೂರು, ಆಗಸ್ಟ್, 01: ರಾಜ್ಯದಲ್ಲಿ ಆನ್ಲೈನ್ ಲೋನ್ ಆ್ಯಪ್ ಮತ್ತು ಆನ್ ಲೈನ್ ಗೇಮ್ ಆ್ಯಪ್ಗಳನ್ನು ಬ್ಯಾನ್ ಮಾಡುವ ಬಗ್ಗೆ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಆನ್ಲೈನ್ ಲೋನ್ಗಳಿಂದ ಯುವ ಸಮುದಾಯ ತೊಂದರೆಗೊಳಗಾಗುತ್ತಿರುವ ಬಗ್ಗೆ ಮಾಹಿತಿಗಳು ಬಂದಿದೆ. ಆನ್ಲೈನ್ ಗೇಮ್ಗಳಿಂದಲೂ ಯುವ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಈ ಗೇಮ್ ಆ್ಯಪ್ ಮತ್ತು ಲೋನ್ ಆ್ಯಪ್ಗಳನ್ನು ಬ್ಯಾನ್ ಮಾಡುವ ಬಗ್ಗೆ ಯೋಚನೆ ಮಾಡಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಅಲ್ಲದೆ ಮುಖ್ಯಮಂತ್ರಿಗಳ ಮಾತಿಗೆ ಬಿಜೆಪಿ ಶಾಸಕರ ಸಹಿತ ಜನಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ.

ಕೆಡಿಪಿ ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಬಳಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕುವ ಬಗ್ಗೆ ಸೂಚನೆ ನೀಡಿದ ಸಿಎಂ, ಡ್ರಗ್ಸ್ ಚಟುವಟಿಕೆಯಲ್ಲಿ ತೊಡಗಿಕೊಂಡವರನ್ನು ಗಡಿಪಾರು ಮಾಡಬೇಕು. ಹಾಗೆಯೇ ಮುಲಾಜಿಲ್ಲದೇ ಅಂತಹವರ ಮೇಲೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಸಜೀಷನ್ ಬಾಕ್ಸ್ಗಳನ್ನು ಇಡಿ. ಆಗ ನಿಮಗೆ ಮತ್ತಷ್ಟು ಮಾಹಿತಿಗಳು ಲಭ್ಯವಾಗುತ್ತದೆ. ಇಲ್ಲದಿದ್ದರೆ ಅವರಿಗೆ ಭಯ ಇರುವುದಿಲ್ಲ ಎಂದು ಹೇಳಿದರು.
ಸೈಬರ್ ಕ್ರೈಮ್ಗಳ ಮೇಲೆ ನಿಗಾ ಇಡಬೇಕು. ಆನ್ಲೈನ್ ಲೋನ್ಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಆನ್ಲೈನ್ ಲೋನ್, ಬೆಟ್ಟಿಂಗ್ಗಳನ್ನು ಬ್ಯಾನ್ ಮಾಡಬೇಕೆಂದು ಯೋಚಿಸಿದ್ದೇನೆ. ಹಾಗೆಯೇ ನೈತಿಕ ಪೊಲೀಸ್ಗಿರಿ ವಿರುದ್ಧ ಸೀರಿಯಸ್ ಆಕ್ಷನ್ ತೆಗೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಯಾರೇ ತಪ್ಪು ಮಾಡಿದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಎಂ
ಹಾಗೆಯೇ ಉಡುಪಿ ಹಾಗೂ ಮಂಗಳೂರು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಜಿಲ್ಲೆಗಳು. ಆದರೆ ಉಡುಪಿ ಜಿಲ್ಲೆ ಪ್ರಗತಿಪರಜಿಲ್ಲೆಯಾಗಿದ್ದರೂ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಬೆಳವಣಿಗೆಯಲ್ಲಿ ಕುಂಠಿತಗೊಂಡಿದೆ. ಜಿಲ್ಲೆಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ಉಡುಪಿಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ವಾಡಿಕೆಗಿಂದ ಶೇಕಡಾ 53ರಷ್ಟು ಮಳೆ ಕಡಿಮೆ ಮಳೆಯಾಗಿದ್ದು, ಜುಲೈ ತಿಂಗಳಲ್ಲಿ ವಾಡಿಕೆಗಿಂತ ಶೇಕಡಾ 25ರಷ್ಟು ಹೆಚ್ಚು ಮಳೆಯಾಗಿದೆ. ಸುಮಾರು ಶೇಕಡಾ 79ರಷ್ಟು ಬಿತ್ತನ ಕಾರ್ಯ ಮುಗಿದಿದೆ ಎಂದರು.
ಬೀಜ, ಗೊಬ್ಬರ ರಸಾಯನಿಕಗಳಿಗೆ ಇಲ್ಲಿಯವರೆಗೆ ಕೊರತೆಯಾಗಿಲ್ಲ. ಬೆಳೆಹಾನಿಯಾಗಿದ್ದರೆ ಮರು ಬಿತ್ತನೆ ಅಥವಾ ಪರ್ಯಾಯ ಬೆಳೆ ಬೆಳೆಯಲು ಬೀಜ, ಗೊಬ್ಬರ ರಸಾಯನಿಕಗಳನ್ನು ಸರಬರಾಜು ಮಾಡಲು ಜಿಲ್ಲಾಧಿಕಾರಿಗಳು ಮತ್ತು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ವರ್ಷ ಜುಲೈ ತಿಂಗಳ ವೇಳೆಗೆ ಶೇಕಡಾ 75ರಷ್ಟು ಬಿತ್ತನೆಯಾಗಿದ್ದು, ಈ ವರ್ಷ ಶೇಕಡಾ 79ರಷ್ಟು ಬಿತ್ತನೆಯಾಗಿದೆ. ಸುಮಾರು 10 ಜನರ ಪ್ರಾಣ ಹಾನಿಯಾಗಿದ್ದು, ಅವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.












Click it and Unblock the Notifications