ಇದು ಅಪಪ್ರಚಾರ ಹಾಗೂ ಸುಳ್ಳಿನ ವಿರುದ್ಧ ನಡೆಯಲಿರುವ ಚುನಾವಣೆ: ಖಾದರ್
ಮಂಗಳೂರು ಏಪ್ರಿಲ್ 16: ಮುಂಬರುವ ವಿಧಾನ ಸಭಾ ಚುನಾವಣೆ ಅಪಪ್ರಚಾರ ಹಾಗೂ ಸುಳ್ಳಿನ ವಿರುದ್ಧ ನಡೆಯಲಿರುವ ಚುನಾವಣೆಯಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಒಂದು ತಿಂಗಳಿನಿಂದ ನನ್ನ ವಿರುದ್ಧ ವ್ಯವಸ್ಥಿತ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 4 ವರ್ಷ 10 ತಿಂಗಳಲ್ಲಿ ರಾಜ್ಯ ಸರಕಾರ ಹಾಗೂ ನನ್ನ ಕ್ಷೇತ್ರದಲ್ಲಿ ನಾನು ಮಾಡಿದ ಕೆಲಸ ಜನರ ಕಣ್ಣ ಮುಂದಿದೆ. ನನ್ನ ರಾಜಕೀಯ ವಿರೋಧಿಗಳು ಕಳೆದ ಒಂದು ತಿಂಗಳಿನಿಂದ ನನ್ನ ವಿರುದ್ಧ ಅಪಪ್ರಚಾರ ಹಾಗೂ ಸುಳ್ಳು ವಿಚಾರ ಹಬ್ಬುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಇದು ಉತ್ತರ ಪ್ರದೇಶವಲ್ಲ. ಇದು ಉಳ್ಳಾಲ. ಇಲ್ಲಿ ಅಂತಹ ಪ್ರಯತ್ನ ಸಾಧ್ಯವಿಲ್ಲ ಎಂದು ಹೇಳಿದ ಅವರು, "ಇಷ್ಟು ವರ್ಷ ಮಾಡಿದ ಕೆಲಸ ಮರೆ ಮಾಚಿ ಕಳೆದ ಒಂದು ತಿಂಗಳಿನಿಂದ ಅಪಪ್ರಚಾರ ಮಾಡಲಾಗುತ್ತಿದೆ," ಎಂದು ಆರೋಪಿಸಿದರು. ಇದಕ್ಕೆ ಕಾರ್ಯಕರ್ತರು ಹಾಗೂ ಜನಸಾಮಾನ್ಯರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಜಮ್ಮು ಕಾಶ್ಮೀರದಲ್ಲಿ ನಡೆದ ಘಟನೆ ಕುರಿತು ಪ್ರಸ್ತಾಪಿಸಿದ ಅವರು ಈ ಘಟನೆ ಜನಸಾಮಾನ್ಯರ ತಲೆ ತಗ್ಗಿಸುವಂತೆ ಮಾಡಿದೆ. ದೇಶದ ಸಂಸ್ಕೃತಿಗೆ ಇದು ಕಪ್ಪು ಚುಕ್ಕೆಯಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಅತ್ಯಾಚಾರಿಗಳಿಗೆ ಕಡಿಮೆಯೆಂದರೆ ಜೀವಾವಧಿ ಶಿಕ್ಷೆ ಹಾಗೂ ಹೆಚ್ಚೆಂದರೆ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದ ಅವರು, ಜಾಮೀನಿಗೆ ಯಾವುದೇ ಕಾರಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು. ಕಾನೂನಿಗೆ ತಿದ್ದುಪಡಿ ಅತ್ಯಗತ್ಯವಾದ್ದರಿಂದ ಕೇಂದ್ರದ ಸಚಿವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
ಅಮಿತ್ ಶಾ ರಾಜ್ಯದಲ್ಲಿ ಕ್ರೈಂ ಬಗ್ಗೆ ಮಾತನಾಡುತ್ತಾರೆ. ಆದರೆ, ರಾಜ್ಯ ಕ್ರೈಂ ರೇಟ್ ನಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದ್ದು, ಅದಕ್ಕಿಂತ ಮುನ್ನ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಬರುತ್ತವೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರಿಗೆ ಕರ್ನಾಟಕದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅವರು ಕಿಡಿಕಾರಿದರು