ಸಿದ್ದರಾಮಯ್ಯ ಉಡುಪಿ ಪ್ರವಾಸ ಮೊಟಕು; ಬೆಂಗಳೂರಿಗೆ ವಾಪಸ್
ಮಂಗಳೂರು, ಡಿಸೆಂಬರ್ 23 : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉಡುಪಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮಂಗಳೂರಿನಲ್ಲಿರುವ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದು, ಬಳಿಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಸೋಮವಾರ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗಾಯಗೊಂಡವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.
ಪೊಲೀಸರ ಗೋಲಿಬಾರ್ನಲ್ಲಿ ಮೃತಪಟ್ಟ ಇಬ್ಬರು ಯುವಕರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕೆಪಿಸಿಸಿ ವತಿಯಿಂದ ಪರಿಹಾರದ ಚೆಕ್ ವಿತರಣೆ ಮಾಡಿದರು. ಗೋಲಿಬಾರ್ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮಂಗಳೂರಿನಿಂದ ಸಿದ್ದರಾಮಯ್ಯ ಉಡುಪಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಹೆಚ್ಚು ಓಡಾಟದಿಂದ ಬಳಲಿರುವ ಅವರು ಮಂಗಳೂರಿನಲ್ಲಿ ಕೆಲವು ತಾಸು ವಿಶ್ರಾಂತಿ ಪಡೆದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ವಾಪಸ್ ಆಗಲಿದ್ದಾರೆ.
ಸಿದ್ದರಾಮಯ್ಯ ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ವೈದ್ಯರು ಅವರಿಗೆ 15 ದಿನಗಳ ಕಡ್ಡಾಯ ವಿಶ್ರಾಂತಿಗೆ ಸೂಚನೆ ನೀಡಿದ್ದರು. ಆದರೆ, ಸಿದ್ದರಾಮಯ್ಯ ವೈದ್ಯರ ಸಲಹೆ ಪಡೆದು ಮಂಗಳೂರಿಗೆ ಭೇಟಿ ನೀಡಿದ್ದರು.
ಸಿದ್ದರಾಮಯ್ಯ ಉಡುಪಿಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಬೇಕಿತ್ತು. ಆದರೆ, ಅವರು ಆಯಾಸಗೊಂಡಿರುವುದರಿಂದ ಉಡುಪಿ ಭೇಟಿಯನ್ನು ರದ್ದುಗೊಳಿಸಿದ್ದಾರೆ.












Click it and Unblock the Notifications