ದಕ್ಷಿಣ ಕನ್ನಡ; ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅಮೈ ಪರಿಚಯ
ಮಂಗಳೂರು, ಜನವರಿ 25; ಕೇಂದ್ರ ಸರ್ಕಾರ ಈ ವರ್ಷದ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರದ ಉದ್ದೇಶದಂತೇ ಈ ಬಾರಿಯೂ ಎಲೆಮರೆಯ ಕಾಯಿಯಂತೆ ಇರುವ ಅದ್ಭುತ ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಲಾಗಿದೆ. ರಾಜ್ಯದ ಹೆಮ್ಮೆಯ ಐವರು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಲಸಾಧಕ ಕೃಷಿಕ ಮಹಾಲಿಂಗ ನಾಯ್ಕ ಅಮೈ ಅವರಿಗೂ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.
ಹೆಸರು ಮಹಾಲಿಂಗ ನಾಯ್ಕ (74). ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. ಇವರು ಜೀವಜಲ ಪಡೆಯುವುದಕ್ಕಾಗಿ ಹಾಕಿರುವ ಶ್ರಮ ಮಾತ್ರ ಎಲ್ಲರನ್ನು ನಿಬ್ಬೆರಗರನ್ನಾಗಿಸುತ್ತದೆ. ಏಕಾಂಗಿಯಾಗಿ ಇವರು ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ್ದಾರೆ.
ಸಿಡಿಸಿ ಬಿಪಿನ್ ರಾವತ್, ಲಸಿಕೆ ತಯಾರಕರಿಗೆ ಪದ್ಮ ಪ್ರಶಸ್ತಿ ಗೌರವ
ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಇವರು ಯಶಸ್ವಿಯಾಗಿದ್ದಾರೆ. ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಮಾಹಾಲಿಂಗ ನಾಯ್ಕ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದ ಒನ್ ಮ್ಯಾನ್ ಆರ್ಮಿ.
ಕರ್ನಾಟಕದ ಐವರು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ
ಕುಡಿಯುವ ನೀರಿಗಾಗಿ ಮೂರು ಕಿ. ಮೀ ದೂರದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಆಗ ಅವರಿಗೆ ಹೊಳೆದುದು ಸುರಂಗ ಕೊರೆಯುವುದು. ಅರ್ಧ ದಿನ ಕೂಲಿ ಕೆಲಸ, ಉಳಿದರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಭಗೀರಥ ಪ್ರಯತ್ನ. ಮಹಾಲಿಂಗ ನಾಯ್ಕ ಮೊದಲು 30 ಮೀಟರ್ ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ.
Breaking; ಪದ್ಮ ಪ್ರಶಸ್ತಿ ತಿರಸ್ಕರಿಸಿದ ಬುದ್ಧದೇವ್ ಭಟ್ಟಾಚಾರ್ಯ
ಇದರಿಂದ ನಿರಾಸೆಯಾಗದ ಅವರು ಮತ್ತೆ ಪ್ರಯತ್ನ ಮುಂದುವರಿಸಿ ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀಟರ್ ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. 62 ಮೀಟರ್ ಉದ್ದದ ಆರನೇ ಸುರಂಗದ ಪ್ರಯತ್ನ ಫಲ ನೀಡಿತು. ಹೀಗೆ ಬರಡಾದ ಭೂಮಿಯಲ್ಲಿ ಜಲ ಕ್ರಾಂತಿ ಮಾಡಿದ ಮಹಾಲಿಂಗ ನಾಯ್ಕರಿಗೆ ಈಗ ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿ ಯಾದ ಪದ್ಮಶ್ರೀ ಪ್ರಶಸ್ತಿ ಲಭ್ಯವಾಗಿದೆ.
ಬಯಸದೇ ಬಂದ ಭಾಗ್ಯ
74ರ ಹರೆಯದ ಮಾಹಾಲಿಂಗ ನಾಯ್ಕ್ ಎಂಬ ಕುಗ್ರಾಮದ ಕೃಷಿಕನಿಗೆ ಈಗ ಬಯಸದೇ ಬಂದ ಭಾಗ್ಯ ಬಂದಿದ್ದು, ಹರೇಕಳ ಹಾಜಬ್ಬರ ಬಳಿಕ ಮತ್ತೊರ್ವ ಅತೀ ಸಾಮಾನ್ಯ ವ್ಯಕ್ತಿಗೆ ಪದ್ಮಶ್ರೀ ಸಿಕ್ಕ ಖುಷಿ ದಕ್ಷಿಣ ಕನ್ನಡ ಜಿಲ್ಲೆಯ ಜನರದ್ದಾಗಿದೆ. ಅಡಿಕೆ, ತೆಂಗಿನ ಮರ ಏರುವುದರಲ್ಲಿ ಪರಿಣತಿ ಹೊಂದಿದ್ದ ಕೃಷಿಕೂಲಿ ಕಾರ್ಮಿಕ ಮಹಾಲಿಂಗ ನಾಯ್ಕ 40 ವರ್ಷಗಳ ಹಿಂದೆ ಊರಿನ ಕೃಷಿಕರ ತೋಟಗಳಲ್ಲಿ ದುಡಿಯುವಾಗ ಸ್ವಂತ ತೋಟ ಮಾಡುವ ಸ್ವಾವಲಂಬಿ ಜೀವನದ ಕನಸು ಕಂಡಿದ್ದರು. ಆದರೆ ಅದಕ್ಕೆ ಅವರಲ್ಲಿ ಜಮೀನು ಇರಲಿಲ್ಲ. ಭೂ ಮಾಲಕ ಅಮೈ ಮಹಾಬಲ ಭಟ್ಟರ ತೋಟಕ್ಕೆ ದಿನಾಲು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಈ ಆದಾಯದಲ್ಲಿ ಅವರ ಸಂಸಾರದ ರಥ ಸಾಗುತ್ತಿತ್ತು. 1978ರಲ್ಲಿ ಮಹಾಬಲ ಭಟ್ಟರ ಸಹಕಾರದಿಂದ 2 ಎಕರೆ ಗುಡ್ಡ ದರ್ಖಾಸ್ತು ರೂಪದಲ್ಲಿ ಮಹಾಲಿಂಗ ನಾಯ್ಕರಿಗೆ ಪ್ರಾಪ್ತವಾಯಿತು.
ರಾತ್ರಿ ಹೊತ್ತು ಸುರಂಗ ಕೊರೆಯುವುದು
ಮನೆ ಕಟ್ಟಲು ಅಸಾಧ್ಯವಾದ, ನೀರಿಲ್ಲದ ಇಳಿಜಾರು ಬೋಳುಗುಡ್ಡದಲ್ಲಿ ಕೃಷಿ ತೋಟ ಮಾಡುವುದು ಮಹಾಲಿಂಗ ನಾಯ್ಕರಿಗೆ ಸವಾಲಾಗಿ ಕಂಡು ಬಂದರೂ ಅವರು ತನ್ನ ಪ್ರಯತ್ನವನ್ನು ಬಿಡಲಿಲ್ಲ. ಅಲ್ಲೇ ಭವಿಷ್ಯ ರೂಪಿಸುವ ಉದ್ದೇಶದಿಂದ ಸ್ವಲ್ಪ ಜಾಗವನ್ನು ಸಮತಟ್ಟು ಮಾಡಿ ಸಣ್ಣದೊಂದು ಗುಡಿಸಲು ಕಟ್ಟಿದರು. ಕುಡಿಯುವ ನೀರಿಗಾಗಿ ಪಕ್ಕದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಬಾವಿ ತೋಡಿದರೆ ನೀರು ದೊರೆಯುವ ಸಾಧ್ಯತೆಯೂ ಇರಲಿಲ್ಲ. ಏಕಾಂಗಿಯಾಗಿ ಬಾವಿ ತೋಡುವುದು ಅಸಾಧ್ಯ ಮಾತು. ಆಗ ಅವರಿಗೆ ಹೊಳೆದುದು ಸುರಂಗ ಕೊರೆತ. ಅರ್ಧ ದಿನ ಕೂಲಿ ಕೆಲಸ, ಉಳಿದಾರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಪ್ರಯತ್ನ ಮಾಡಿದರು.
ಮಹಾಲಿಂಗ ನಾಯ್ಕ ಮೊದಲು 30 ಮೀ. ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ. ನಿರಾಸೆಯಾಗದ ಅವರು ಮತ್ತೆ ಪ್ರಯತ್ನ ಮುಂದುವರಿಸಿ ಸೀಮೆಎಣ್ಣೆ , ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀ. ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. ಆದರೂ ಅವರ ಅಪಾಯಕಾರಿ ಪ್ರಯತ್ನಕ್ಕೆ ಫಲ ದೊರೆಯಲಿಲ್ಲ. ಅವರ ಪ್ರಯತ್ನವನ್ನು ನೋಡಿ ಹಲವರು ಗೇಲಿ ಮಾಡಿದ್ದರು ಎಂದು ಮಹಾಲಿಂಗ ನಾಯ್ಕ ಅಂದಿನ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ.
ಭಗೀರಥ ಪ್ರಯತ್ನ ನಿಲ್ಲಿಸಲಿಲ್ಲ
ಯಾರು ಏನು ಹೇಳಿದರೂ ತನ್ನ ಭಗೀರಥ ಪ್ರಯತ್ನವನ್ನು ನಿಲ್ಲಿಸದೆ ಮುಂದುವರಿಸಿದ ಮಹಾಲಿಂಗ ನಾಯ್ಕರಿಗೆ ಆರನೇ ಪ್ರಯತ್ನ ಫಲ ನೀಡಿತು. ಈ ಪ್ರಯತ್ನದಲ್ಲಿ ನೀರು ಕಾಣಿಸಿತು. 25 ಮೀ. ಉದ್ದದ ಸುರಂಗದಲ್ಲಿ ಸಿಕ್ಕಿದ ನೀರಿನಲ್ಲಿ ಕೃಷಿ ಸಾಧ್ಯವಿಲ್ಲ ಎನ್ನುವುದು ಅವರಿಗೆ ಅರಿವಾಯಿತು. ಆರನೇ ಸುರಂಗದ ಪಕ್ಕದಲ್ಲಿ ಇನ್ನೊಂದು ಸುರಂಗ ಕೊರೆದರು. 25 ಮೀ. ತಲುಪುವಾಗ ನೀರು ಕಾಣಿಸಿಕೊಂಡಿತು. ಮತ್ತೆ ಮುಂದುವರಿಸಿ 75 ಮೀ. ಉದ್ದದ ಸುರಂಗವಾಗುವ ಹೊತ್ತಿಗೆ ಯಥೇಚ್ಛ ನೀರು ಸಿಕ್ಕಿತು. ಆಗ ಅವರ ತೋಟದ ಕನಸು ಮತ್ತೆ ಗರಿಗೆದರಿತು. ಸುರಂಗದ ನೀರನ್ನು ಸಂಗ್ರಹಿಸಲು ಮಣ್ಣಿನ ಟ್ಯಾಂಕ್ ನಿರ್ಮಿಸಿದರು. ನೀರಿನ ಸಂಪನ್ನತೆಯಿಂದಾಗಿ ತೋಟ ಮಾಡುವ ಕನಸು ನನಸಾಯಿತು. ಗುಡ್ಡವನ್ನು ಸಮತಟ್ಟು ಮಾಡಿ ಭತ್ತ, ಅಡಿಕೆ, ತೆಂಗು, ಬಾಳೆ ಕೃಷಿ ಕೈಗೊಂಡರು. ಮಡದಿ ಲಲಿತ ಮೂವರು ಮಕ್ಕಳು ಪ್ರಯತ್ನಕ್ಕೆ ಕೈ ಜೋಡಿಸಿದರು.
ಮೂರು ತಿಂಗಳು ಆಸ್ಪತ್ರೆಯಲ್ಲಿದ್ದರು
ಕೃಷಿಯಿಂದ ಆದಾಯ ಬರುತ್ತಿದ್ದರೂ ಅವರು ಹಿಂದಿನ ದುಡಿಮೆಯ ಕಾಯಕವನ್ನು ನಿಲ್ಲಿಸಿರಲಿಲ್ಲ. ಹದಿನಾಲ್ಕು ವರ್ಷಗಳ ಹಿಂದೆ ನೆಗಳಗುಳಿ ಎಂಬಲ್ಲಿ ಕೃಷಿಕರೊಬ್ಬರ ತೋಟದಲ್ಲಿ ತೆಂಗಿನ ಮರ ಹತ್ತುತ್ತಿದ್ದಾಗ ಮಹಾಲಿಂಗ ನಾಯ್ಕ ಆಕಸ್ಮಿಕವಾಗಿ ಜಾರಿ ಬಿದ್ದು ಗಾಯಗೊಂಡರು. ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆ ಸೇರಿದ ಮಹಾಲಿಂಗ ನಾಯ್ಕ ಮೂರು ತಿಂಗಳು ಆಸ್ಪತ್ರೆಯಲ್ಲಿದ್ದರು. ಬಳಿಕ ಮನೆಗೆ ಮರಳಿದ್ದರೂ ಚೇತರಿಸಿಕೊಳ್ಳುವ ಹೊತ್ತಿಗೆ ಒಂದು ವರ್ಷ ಕಳೆದಿತ್ತು. ದುಡಿದು ಉಳಿಸಿದ ಹಣ ಕರಗಿ ಹೋಯಿತು. ಈ ಘಟನೆಯ ಬಳಿಕ ಅಡಿಕೆ, ತೆಂಗಿನಮರ ಹತ್ತುವ ಕಾಯಕದಿಂದ ನಿವೃತ್ತರಾದರು. ಆದರೆ ಕೃಷಿಯನ್ನು ಮುಂದುವರಿಸಿದರು.
ಮಹಾಲಿಂಗ ನಾಯ್ಕ ಒಂದು ಎಕರೆಯಲ್ಲಿ ಅಡಿಕೆ, ತೆಂಗು, ಬಾಳೆ, ಕಾಳುಮೆಣಸಿನ ಕೃಷಿ ಕೈಗೊಂಡಿದ್ದಾರೆ. ಇನ್ನೊಂದು ಎಕರೆಯಲ್ಲಿ ಕಾಡು ಬೆಳೆಸಿದ್ದಾರೆ. ಗೇರು ಕೃಷಿಯೂ ಇದೆ. ಮಣ್ಣಿನ ಟ್ಯಾಂಕಿಯಿಂದ ವಿದ್ಯುತ್ನ ಖರ್ಚಿಲ್ಲದೆ ಗ್ರಾವಿಟಿ ಮೂಲಕ ಅಡಿಕೆ, ತೆಂಗು ಮತ್ತು ಬಾಳೆಗಿಡಗಳಿಗೆ ನೀರು ಉಣಿಸುತ್ತಾರೆ. ಅವರ ತೋಟದಲ್ಲಿ 300 ಅಡಿಕೆ, 75 ತೆಂಗು, 200 ಬಾಳೆಗಿಡಗಳಿವೆ. ಹಟ್ಟಿಗೊಬ್ಬರ, ಕಾಂಪೋಸ್ಟ್ ಹೊರತು ಬೇರೆ ಯಾವುದೇ ಗೊಬ್ಬರದ ಬಗ್ಗೆ ಮಾಹಾಲಿಂಗ ನಾಯ್ಕರಿಗೆ ಗೊತ್ತಿಲ್ಲ. ಜಮೀನಿನಲ್ಲಿ ಇಂಗುಗುಂಡಿಗಳ ಮೂಲಕ ಜಲಕೊಯ್ಲು ಮಾಡುತ್ತಾರೆ. ನಾಲ್ಕು ವರ್ಷಗಳ ಹಿಂದೆ 2 ಬೋರ್ವೆಲ್ ತೆಗೆಸಿದ್ದಾರೆ. ಮೊದಲ ಬೋರ್ವೆಲ್ 400 ಅಡಿ ಸಾಗಿದ್ದರೂ ನೀರು ದೊರೆಯಲಿಲ್ಲ. 2ನೇ ಬೋರ್ನಲ್ಲಿ 370 ಅಡಿ ತಲುಪುವ ಹೊತ್ತಿಗೆ 1 ಇಂಚು ನೀರು ಸಿಕ್ಕಿದೆ. ಇದೀಗ ಬೋರ್ವೆಲ್ಗೆ ಪಂಪ್ಸೆಟ್ ಇದೀಗ ಅಳವಡಿಸಿದ್ದಾರೆ.
ಶಾಲೆ ಮೆಟ್ಟಿಲು ಹತ್ತದ ಛಲಗಾರ
ಸಾಲಕ್ಕಾಗಿ ಯಾವುದೇ ಬ್ಯಾಂಕ್ ಮೊರೆ ಹೋಗಿಲ್ಲ. ಕೃಷಿಯಲ್ಲಿ ದೊರೆತ ಆದಾಯದಿಂದ ಸ್ವಂತ ಮನೆ ಕಟ್ಟಿದ್ದಾರೆ. ಮನೆಗೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳು ಬಂದಿವೆ. ಶಾಲಾ ಕಾಲೇಜುಗಳ ಮೆಟ್ಟಿಲು ಹತ್ತದ ಛಲಗಾರ ಮಹಾಲಿಂಗ ನಾಯ್ಕರಿಗೆ ದುಡಿಮೆ ಎಲ್ಲವನ್ನು ನೀಡಿದೆ.
ಒಟ್ಟಿನ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮತ್ತೊರ್ವ ಅರ್ಹ ಸಾಧನೆಗೆ ಕೇಂದ್ರ ದ ಪದ್ಮಶ್ರೀ ಪ್ರಶಸ್ತಿ ಅರಸಿಕೊಂಡು ಬಂದಿದೆ. ಸರ್ಕಾರದ ಪೀಪಲ್ಸ್ ಪದ್ಮ ಎನ್ನುವ ಧ್ಯೇಯ ಕ್ಕೆ ನಿಜವಾದ ಅರ್ಥ ಸಿಕ್ಕಿದೆ.