ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಬರಲಿದ್ದಾರೆ ಮೋದಿ
ಮಂಗಳೂರು, ಮಾರ್ಚ್ 28:ರಾಜ್ಯದ ಕರಾವಳಿಯಲ್ಲಿ ಚುನಾವಣಾ ಕಣ ರಂಗೇರತೊಡಗಿದೆ. ಬಿಸಿಲ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಚುನಾವಣಾ ಕಾವು ಕೂಡ ಹೆಚ್ಚುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಅಬ್ಬರ ತಾರಕಕ್ಕೇರಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಬಿರುಸುಗೊಂಡಿದೆ. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ ನಲ್ಲಿ ಮಂಗಳೂರಿಗೆ ಆಗಮಿಸಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕರಾವಳಿಯಲ್ಲಿ ಕೇಸರಿ ಪಡೆಗೆ ಮೋದಿ ಹೆಸರಿನಲ್ಲಿ ಮತ ಕೇಳುವ ಅನಿವಾರ್ಯತೆ!
ಬಿಜೆಪಿಯ ಚುನಾವಣಾ ಪ್ರಚಾರ ತಂತ್ರಗಾರಿಕೆ ಭಾಗವಾಗಿ ಏಪ್ರಿಲ್ 8ರಿಂದ 14ರವರೆಗೆ ಗ್ರಾಮೀಣ ಸಂವಾದ ಮತ್ತು ನಗರ ಸಂವಾದ ಕಾರ್ಯಕ್ರಮ, ರೋಡ್ ಶೋ ಆಯೋಜಿಸಲಿದೆ.
ಕ್ಷೇತ್ರದಲ್ಲಿ ಒಟ್ಟು 55 ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಶೀಘ್ರದಲ್ಲೇ ಮೋದಿ ಅವರ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮೋದಿ ಅಲೆಯಿದೆ ಎಂದ ಜನಾರ್ದನ ಪೂಜಾರಿ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳ 1861 ಬೂತ್ಗಳಲ್ಲಿ ಏಪ್ರಿಲ್ 7 ಮತ್ತು 14ರಂದು ಬಿಜೆಪಿ ಮಹಾ ಸಂಪರ್ಕ ಅಭಿಯಾನ ನಡೆಸಲಿದೆ. ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಶಾಸಕರು ಸಹಿತ ಪಕ್ಷದ ಎಲ್ಲ ನಾಯಕರು ವಿವಿಧ ಬೂತ್ ಮಟ್ಟದಲ್ಲಿ ನಡೆಯುವ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಯುವ ಅಭ್ಯರ್ಥಿಗಳ ಜಿದ್ದಾಜಿದ್ದಿಗೆ ಅಖಾಡ ಸಿದ್ಧ
ಇದೇ ಬರುವ ಮಾರ್ಚ್ 28ರಿಂದ 30ರವರೆಗೆ ಕ್ಷೇತ್ರದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ, ಏಪ್ರಿಲ್ 3ರಿಂದ 5ರವರೆಗೆ ಎಲ್ಲಾ ಬೂತ್ಗಳಲ್ಲಿ ಮನೆ ಸಂಪರ್ಕ ನಡೆಯಲಿದೆ. ಏಪ್ರಿಲ್ 7 ಮತ್ತು 14 ರಂದು ನಡೆಯುವ ಮಹಾ ಸಂಪರ್ಕ ಅಭಿಯಾನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಒಂದೇ ದಿನದಲ್ಲಿ ಜಿಲ್ಲೆಯ ಎಲ್ಲಾ ಮನೆಗಳನ್ನು ಸಂಪರ್ಕಿಸಲು ಸಿದ್ಧತೆ ನಡೆಸಿದ್ದಾರೆ.