ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್: ಮಂಗಳೂರು – ಕೊಚ್ಚಿ ನೈಸರ್ಗಿಕ ಅನಿಲ ಕೊಳವೆ ಮಾರ್ಗ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರ್ನಾಟಕದ ಮಂಗಳೂರು - ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಇಂದು(ಜನವರಿ 05) ಸಮರ್ಪಿಸಿದರು. ''ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್'' ಅಡಿಯಲ್ಲಿ ಈ ಪೈಪ್ ಲೈನ್ ಪ್ರಮುಖ ಮೈಲಿಗಲ್ಲಾಗಿದೆ. 450 ಕಿ. ಮೀ ದೂರದ ಮಾರ್ಗ ಕರ್ನಾಟಕ -ಕೇರಳ ರಾಜ್ಯ ಹಾಗೂ ದೇಶಕ್ಕೆ ಹೊಸ ಹಾದಿ ಹಾಕಿಕೊಡಲಿದೆ ಎಂದು ಮೋದಿ ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಉಭಯ ರಾಜ್ಯಗಳ ರಾಜ್ಯಪಾಲರು ಉಪಸ್ಥಿತರಿದ್ದರು.
ಕೊಳವೆ ಮಾರ್ಗದ ಬಗ್ಗೆ: 450 ಕಿ.ಮೀ. ಉದ್ದದ ಈ ಕೊಳವೆ ಮಾರ್ಗವನ್ನು ಜಿ.ಎ.ಐ.ಎಲ್. (ಇಂಡಿಯಾ) ಲಿ., ನಿರ್ಮಿಸಿದೆ. ಇದು ಪ್ರತಿನಿತ್ಯ 12 ದಶಲಕ್ಷ ಮೆಟ್ರಿಕ್ ಸ್ಟಾಂಡರ್ಡ್ ಕ್ಯುಬಿಕ್ ಮೀಟರ್ ಅನಿಲ ಸಾಗಿಸುವ ಸಾಮರ್ಥ್ಯವನ್ನು ಹೊಂದಿದ್ದು, ಕೇರಳದ ಕೊಚ್ಚಿಯ ದ್ರವೀಕೃತ ನೈಸರ್ಗಿಕ ಅನಿಲ (ಎನ್.ಎನ್.ಜಿ) ಮರುಹೊಂದಾಣಿಕೆ ಟರ್ಮಿನಲ್ ನಿಂದ ಎರ್ನಾಕುಲಂ, ತ್ರಿಸ್ಸೂರ್, ಪಾಲಕ್ಕಾಡ್, ಮಲ್ಲಪುರಂ, ಕೋಳಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಮೂಲಕ ಹಾಗೂ ಕರ್ನಾಟಕದ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿಗೆ ನೈಸರ್ಗಿಕ ಅನಿಲವನ್ನು ಸಾಗಿಸುತ್ತದೆ.

ಯೋಜನೆಯ ಒಟ್ಟು ವೆಚ್ಚ ಸುಮಾರು 3000 ಕೋಟಿ ರೂ.ಗಳಾಗಿದ್ದು, ಅದರ ನಿರ್ಮಾಣವು 12 ಲಕ್ಷ ಮಾನವ-ದಿನಗಳ ಉದ್ಯೋಗವನ್ನು ಸೃಷ್ಟಿಸಿತ್ತು. ಕೊಳವೆ ಮಾರ್ಗ ಅಳವಡಿಕೆಯು ಎಂಜಿನಿಯರಿಂಗ್ ಸವಾಲಾಗಿತ್ತು, ಏಕೆಂದರೆ ಕೊಳವೆ ಮಾರ್ಗವು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಲಮೂಲಗಳನ್ನು ದಾಟುವುದು ಅನಿವಾರ್ಯವಾಗಿತ್ತು. ಇದನ್ನು ಅಡ್ಡಡ್ಡ ಕೊರೆಯುವ ವಿಧಾನದ ವಿಶೇಷ ತಂತ್ರಜ್ಞಾನದ ಮೂಲಕ ಮಾಡಲಾಯಿತು.

ಈ ಕೊಳವೆ ಮಾರ್ಗ ಪರಿಸರ ಸ್ನೇಹಿ ಮತ್ತು ಕೈಗೆಟಕುವ ದರದ ಇಂಧನವನ್ನು ಕೊಳವೆ ಮಾರ್ಗದ ನೈಸರ್ಗಿಕ ಅನಿಲ (ಪಿ.ಎನ್.ಜಿ.)ರೂಪದಲ್ಲಿ ಮನೆಗಳಿಗೆ ಪೂರೈಸಲಿದೆ ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿ.ಎನ್.ಜಿ.) ಯನ್ನು ಸಾರಿಗೆ ವಲಯಕ್ಕೆ ಸರಬರಾಜು ಮಾಡಲಿದೆ.












Click it and Unblock the Notifications