Breaking: ಮಂಗಳೂರಿನಲ್ಲಿ 10ಕ್ಕೂ ಹೆಚ್ಚು ಪಿಎಫ್ಐ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಮಂಗಳೂರು, ಸೆಪ್ಟೆಂಬರ್ 27: ಎಎನ್ಐ ತಂಡ ಕೆಲವು ಪಿಎಫ್ಐ ನಾಯಕರ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ಬಂಧಿಸಿದೆ. ಇದೀಗ ಮಂಗಳವಾರ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಾಳಿ ಮಾಡಿದ್ದು 10ಕ್ಕೂ ಹೆಚ್ಚು ಪಿಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಸ್ಥಳಗಳ ಮೇಲೆ ದಾಳಿ ಮಾಡಿ 10ಕ್ಕೂ ಪಿಎಫ್ ಐ ಮುಖಂಡರನ್ನು ಪೊಲೀಸರ ವಶ ಪಡಿಸಿಕೊಂಡಿದ್ದಾರೆ. ಮೊದಲ ಎನ್ಐಎ ದಾಳಿಯಲ್ಲಿ 5 ಮಂದಿ ಪಿಎಫ್ಐ ನಾಯಕರನ್ನು ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ಜಿಲ್ಲೆಯಾದ್ಯಂತ ದೊಡ್ಡ ಪ್ರತಿಭಟನೆ ಮತ್ತು ಗಲಭೆ ನಡೆಸಲು ಸಾಧ್ಯತೆ ಹಿನ್ನೆಲೆಯಲ್ಲಿ ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದಾರೆ.
Breaking: ADGP ಅಲೋಕ್ ನೇತೃತ್ವದಲ್ಲಿ ಪಿಎಫ್ಐಗೆ ಸೇರಿದ ಸ್ಥಳಗಳಲ್ಲಿ ರಾಜ್ಯಾದ್ಯಂತ ದಾಳಿ
ಪಿಎಫ್ಐ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್ ಸೇರಿ 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಸಿಆರ್ಪಿಸಿ 107 ಮತ್ತು 151ರಡಿಯಲ್ಲಿ ಪಿಎಫ್ಐ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಠಾಣಾ ವ್ಯಾಪ್ತಿಯ ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಲಾಗಿದ್ದು, 7ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಡಿಯಾಲ್ ಬೈಲ್ ಬಳಿಯ ಮಂಗಳೂರು ಜಿಲ್ಲಾ ಕಾರಾಗೃಹ ಜೈಲಿಗೆ ಕರೆ ತಂದು ಬಿಡಲಾಗಿದೆ.
ಮಂಗಳೂರಿನ ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ ಪುತ್ತೂರು ಭಾಗದಲ್ಲಿ ದಾಳಿ ನಡೆಸಲಾಗಿದೆ. ಮೊದಲ ಎನ್ಐಎ ದಾಳಿಯನ್ನು ಖಂಡಿಸಿ ಜಿಲ್ಲೆಯಾದ್ಯಂತ ದೊಡ್ಡ ಪ್ರತಿಭಟನೆ ಮಾಡುವ ಯೋಜನೆ ರೂಪಿಸಿಕೊಂಡಿದ್ದರು ಎಂಬ ಮಾಹಿತಿ ಹಿನ್ನಲೆ ಪೊಲೀಸ್ ದಾಳಿ ಮಾಡಲಾಗಿದೆ.
ಮಂಗಳೂರು ಅಷ್ಟೇ ಅಲ್ಲದೆ, ರಾಯಚೂರು, ಉಡುಪಿ, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರು ಪಿಎಫ್ಐ ಮುಂಡರ ಮನೆ ಮೇಲೆ ದಾಳಿ ಮಾಡಲಾಗಿದೆ. ಒಟ್ಟಾರೆ ರಾಜ್ಯಾದ್ಯಂತ 40 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.